ನವದೆಹಲಿ (ಪಿಟಿಐ): ಪ್ರಸಕ್ತ ಶೈಕ್ಷಣಿಕ ಸಾಲಿನ ಮಧ್ಯದಲ್ಲಿ ಜರ್ಮನ್ ಭಾಷೆಯ ಬದಲು ಸಂಸ್ಕೃತವನ್ನು ತೃತೀಯ ಭಾಷೆಯನ್ನಾಗಿ ಆಯ್ಕೆ ಮಾಡಿಕೊಂಡ ವಿದ್ಯಾರ್ಥಿಗಳು ತೃತೀಯ ಭಾಷೆಯ ಪರೀಕ್ಷೆ ಬರೆಯಬೇಕಾಗಿಲ್ಲ ಎಂದು ಕೇಂದ್ರೀಯ ವಿದ್ಯಾಲಯ ಸಂಘಟನೆ (ಕೆ.ವಿ.ಎಸ್) ಸೋಮವಾರ ಸುಪ್ರೀಂಕೋರ್ಟ್ಗೆ ಪ್ರಮಾಣ ಪತ್ರ ಸಲ್ಲಿಸಿದೆ.
ಕೇಂದ್ರೀಯ ವಿದ್ಯಾಲಯಗಳಲ್ಲಿ ಜರ್ಮನ್ ಬದಲು ಸಂಸ್ಕೃತವನ್ನು ತೃತೀಯ ಭಾಷೆಯನ್ನಾಗಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಆಕ್ಷೇಪಣಾ ಅರ್ಜಿಯನ್ನು ಸುಪ್ರೀಂಕೋರ್ಟ್ ಮಂಗಳವಾರ ಕೈಗೆತ್ತಿಕೊಳ್ಳಲಿದೆ. ಇದರಿಂದಾಗಿ ಕೇಂದ್ರೀಯ ವಿದ್ಯಾಲಯ ಸಂಘಟನೆ ಸೋಮವಾರವೇ ಈ ಪ್ರಮಾಣ ಪತ್ರ ಸಲ್ಲಿಸಿದೆ.