ಬೆಂಗಳೂರು: ‘ಅತ್ಯಾಚಾರಕ್ಕೆ ತುತ್ತಾದವರಿಗೆ ಧೈರ್ಯ ತುಂಬಿ, ಕಾನೂನು–ಸುವ್ಯವಸ್ಥೆ ಕಾಪಾಡಲು ರಾಜ್ಯ ಸರ್ಕಾರ ಮುಂದಾಗಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಕ್ಕೆ ಸಮರ್ಥ ಗೃಹ ಸಚಿವರನ್ನು ನೇಮಿಸಬೇಕು’ ಎಂದು ಜೆಡಿಎಸ್ ಒತ್ತಾಯಿಸಿದೆ.
ಬೆಂಗಳೂರಿನ ಬಿಪಿಒ ಉದ್ಯೋಗಿ ಮೇಲೆ ಆದ ಅತ್ಯಾಚಾರವನ್ನು ಗೃಹ ಸಚಿವ ಕೆ.ಜೆ. ಜಾರ್ಜ್ ಅವರು ತಮ್ಮದೇ ಆದ ರೀತಿಯಲ್ಲಿ ವ್ಯಾಖ್ಯಾನಿಸಿ, ಅನಗತ್ಯ ಚರ್ಚೆ ಮತ್ತು ಅನುಮಾನಗಳಿಗೆ ಅವಕಾಶ ಕಲ್ಪಿಸಿದ್ದಾರೆ ಎಂದು ಜೆಡಿಎಸ್ ವಕ್ತಾರ ರಮೇಶ್ ಬಾಬು ಆರೋಪಿಸಿದ್ದಾರೆ.
ಭಾರತೀಯ ದಂಡ ಸಂಹಿತೆಗೆ ತಂದಿರುವ ತಿದ್ದುಪಡಿ ಅನ್ವಯ, ಮಹಿಳೆಯರ ಮೇಲೆ ಒಬ್ಬರಿಗಿಂತ ಹೆಚ್ಚು ವ್ಯಕ್ತಿಗಳು ಲೈಂಗಿಕ ದೌರ್ಜನ್ಯ ಎಸಗಿದರೆ ಅದನ್ನು ಸಾಮೂಹಿಕ ಅತ್ಯಾಚಾರವೆಂದೇ ಗುರುತಿಸುತ್ತಾರೆ ಎಂದು ರಮೇಶ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ.