ಚೆನ್ನೈ (ಪಿಟಿಐ): ಮೇಕೆದಾಟು ಯೋಜನೆ ಕುರಿತಂತೆ ರಾಜ್ಯ ಸರ್ಕಾರ ಸರ್ವಪಕ್ಷಗಳ ಸಭೆ ಕರೆಯಬೇಕು ಮತ್ತು ಈ ವಿಷಯದಲ್ಲಿ ರಾಜ್ಯದ ಎಲ್ಲಾ ಪಕ್ಷಗಳು ಭಿನ್ನಾಭಿಪ್ರಾಯ ಬದಿಗಿರಿಸಬೇಕು ಎಂದು ಎನ್ಡಿಎ ಮಿತ್ರಪಕ್ಷ ಪಿಎಂಕೆ ಭಾನುವಾರ ಒತ್ತಾಯಿಸಿದೆ.
ಮೇಕೆದಾಟು ಬಳಿ ಅಣೆಕಟ್ಟೆ ನಿರ್ಮಾಣದ ವಿರುದ್ಧ ಸರ್ವಪಕ್ಷಗಳ ಸಭೆಯಲ್ಲಿ ನಿರ್ಣಯ ಅಂಗೀಕರಿಸಬೇಕು. ಈ ಕುರಿತು ಪ್ರಧಾನಿಗೆ ಮನವಿ ಸಲ್ಲಿಸಲು ಮುಖ್ಯಮಂತ್ರಿ ಅವರು ದೆಹಲಿಗೆ ಸರ್ವ ಪಕ್ಷಗಳ ನಿಯೋಗ ಕೊಂಡೊಯ್ಯಬೇಕು ಎಂದು ಪಿಎಂಕೆ ನಾಯಕ ಎಸ್. ರಾಮದಾಸ್ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ತಮಿಳುನಾಡಿಗೆ ಕಾವೇರಿ ನೀರು ಪ್ರಮುಖ ಜೀವನೋಪಾಯವಾಗಿದ್ದರೂ ಆಡಳಿತ ಪಕ್ಷ ಮತ್ತು ಸರ್ಕಾರಕ್ಕೆ ಇದು ಗಂಭೀರ ವಿಷಯವಾಗಿ ಕಾಣುತ್ತಿಲ್ಲ. ಈ ಕಾರಣ ಅವರಿಗೆ ಕರ್ನಾಟಕದ ವಿರುದ್ಧಹೋರಾಡುವುದು ಬೇಕಾಗಿಲ್ಲ ಎಂದು ಅವರು ಹೇಳಿದ್ದಾರೆ. ಈ ವಿಷಯದಲ್ಲಿ ತಮಿಳುನಾಡಿನ ರಾಜಕೀಯ ಪಕ್ಷಗಳು ತಮ್ಮ ಭಿನ್ನಾಭಿಪ್ರಾಯ ಮರೆತು ಒಗ್ಗೂಡುವುದು ಮುಖ್ಯ ಎಂದು ಅವರು ಹೇಳಿದ್ದಾರೆ.
ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ನಡೆದ ಪ್ರತಿಭಟನೆಗಳ ಕುರಿತು ಪ್ರಸ್ತಾಪಿಸಿರುವ ಅವರು, ಕರ್ನಾಟಕದಲ್ಲಿ ರಾಜ್ಯ ಸರ್ಕಾರದ ಬೆಂಬಲವಿದ್ದ ಕಾರಣ ಬಂದ್ ಯಶಸ್ವಿಯಾಗಿದೆ ಎಂದಿದ್ದಾರೆ.