ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳನ್ನು ಖಂಡಿಸಿ ವಿವಿಧ ಸಂಘಟನೆಗಳ ನಗರದಲ್ಲಿ ಬುಧವಾರವೂ ಪ್ರತಿಭಟನೆ ನಡೆಸಿದವು. ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ನ (ಎಬಿವಿಪಿ) 22 ಮಂದಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ನಂತರ ಬಿಡುಗಡೆ ಮಾಡಿದರು.
ಬೆಳಿಗ್ಗೆ 11.30ರ ಸುಮಾರಿಗೆ ಸ್ವಾತಂತ್ರ್ಯ ಉದ್ಯಾನದಲ್ಲಿ ಜಮಾಯಿಸಿದ ಎಬಿವಿಪಿ ಕಾರ್ಯಕರ್ತರು, ಕುಮಾರಕೃಪ ರಸ್ತೆಯಲ್ಲಿರುವ ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ ಹಾಕುವುದಾಗಿ ಜಾಥಾ ಹೊರಟರು. ಆದರೆ, ಆನಂದ್ರಾವ್ ವೃತ್ತದ ಬಳಿ ಪೊಲೀಸರು ಬ್ಯಾರಿಕೇಡ್ಗಳನ್ನು ಹಾಕಿ ಅವರನ್ನು ಅಡ್ಡಗಟ್ಟಿದರು. ಇದರಿಂದಾಗಿ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು. ಆಗ ಮುಂಜಾಗ್ರತಾ ಕ್ರಮವಾಗಿ ಪೊಲೀಸರು 22 ಪ್ರತಿಭಟನಾಕಾರರನ್ನು ಬಂಧಿಸಿದರು.
ಇದರಿಂದ ಆಕ್ರೋಶಗೊಂಡ ಪ್ರತಿಭಟನಾಕಾರರು, ‘ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಪತ್ತೆ ಮಾಡುವಲ್ಲಿ ವಿಫಲವಾಗಿರುವ ಪೊಲೀಸರು, ಪ್ರತಿಭಟನಾಕಾರರ ಮೇಲೆ ಬಲಪ್ರಯೋಗ ಮಾಡುತ್ತಿರುವುದು ವಿಪರ್ಯಾಸ. ಬಂಧಿತರನ್ನು ಕೂಡಲೇ ಬಿಡುಗಡೆ ಮಾಡಿ. ಇಲ್ಲವೇ, ನಮ್ಮನ್ನೂ ಬಂಧಿಸಿ’ ಎಂದು ಪಟ್ಟು ಹಿಡಿದು ಆನಂದ್ರಾವ್ ವೃತ್ತದಲ್ಲೇ ಧರಣಿ ಕುಳಿತರು.
ಈ ವೇಳೆ ಸ್ಥಳಕ್ಕೆ ಬಂದ ಹಿರಿಯ ಪೊಲೀಸ್ ಅಧಿಕಾರಿಗಳು, ಸುಮಾರು ಅರ್ಧ ತಾಸು ಮಾತುಕತೆ ನಡೆಸಿ ಪ್ರತಿಭಟನಾಕಾರರ ಮನವೊಲಿಸುವಲ್ಲಿ ಯಶಸ್ವಿಯಾದರು. ಬಳಿಕ 10 ಮಂದಿ ಸದಸ್ಯರ ನಿಯೋಗ ಕಾನೂನು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಕಮಿಷನರ್ ಅಲೋಕ್ ಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.
‘ಮಹಿಳೆಯರ ಸುರಕ್ಷತೆಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಜತೆಗೆ ಶಾಲಾ–ಕಾಲೇಜುಗಳ ಆವರಣದಲ್ಲಿ ವಿದ್ಯಾರ್ಥಿನಿಯರ ರಕ್ಷಣೆಗೆ ಪ್ರತ್ಯೇಕ ಸಮಿತಿ ರಚಿಸುವಂತೆ ಶಿಕ್ಷಣ ಸಂಸ್ಥೆಗಳಿಗೆ ಸೂಚನೆ ನೀಡಲಾಗುವುದು ಎಂದು ಅಲೋಕ್ಕುಮಾರ್ ಅವರು ಭರವಸೆ ನೀಡಿದರು. ಹೀಗಾಗಿ ಹೋರಾಟವನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಯಿತು’ ಎಂದು ಎಬಿವಿಪಿ ಜಿಲ್ಲಾ ಘಟಕದ ಸಂಚಾಲಕ ಪ್ರಶಾಂತ್ ತಿಳಿಸಿದರು.
ಅದೇ ರೀತಿ ದಲಿತ ಸಂಘರ್ಷ ಸಮಿತಿ, ಜನವಾದಿ ಮಹಿಳಾ ಸಂಘಟನೆ, ಭಾರತ ವಿದ್ಯಾರ್ಥಿ ಒಕ್ಕೂಟ (ಎಸ್ಎಫ್ಐ) ಸೇರಿದಂತೆ ವಿವಿಧ ಸಂಘಟನೆಗಳ ಸದಸ್ಯರು ಸಹ ನಗರದಲ್ಲಿ ಮಂಗಳವಾರ ಪ್ರತಿಭಟನೆ ಮಾಡಿ, ಗೃಹ ಸಚಿವ ಕೆ.ಜೆ. ಜಾರ್ಜ್ ಮತ್ತು ನಗರ ಪೊಲೀಸ್ ಕಮಿಷನರ್ ಎಂ.ಎನ್.ರೆಡ್ಡಿ ಅವರಿಗೆ ಮನವಿ ಸಲ್ಲಿಸಿದರು.
ಭದ್ರತೆಗೆ 100 ಪೊಲೀಸರು
‘ಎಬಿವಿಪಿ ಜಾಥಾ ಕಾರಣ ಆನಂದ್ರಾವ್ ವೃತ್ತದ ಬಳಿ ಬ್ಯಾರಿಕೇಡ್ಗಳನ್ನು ಹಾಕಿ, ಭದ್ರತೆಗೆ ನೂರು ಮಂದಿ ಪೊಲೀಸರನ್ನು ನಿಯೋಜಿಸಲಾಗಿತ್ತು. ಈ ವೇಳೆ ಕೆಲ ಪ್ರತಿಭಟನಾಕಾರರು ಬ್ಯಾರಿಕೇಡ್ಗಳನ್ನು ಬೀಳಿಸಿ ಮುನ್ನುಗ್ಗಲು ಯತ್ನಿಸಿದರು. ಹೀಗಾಗಿ ಪರಿಸ್ಥಿತಿ ನಿಯಂತ್ರಿಸಲು 22 ಮಂದಿಯನ್ನು ಬಂಧಿಸಿ, ಸಂಜೆ 4 ಗಂಟೆಗೆ ಅವರನ್ನು ಬಿಡುಗಡೆ ಮಾಡಲಾಯಿತು’ ಎಂದು ಕೇಂದ್ರ ವಿಭಾಗದ ಡಿಸಿಪಿ ಬಿ.ಆರ್.ರವಿಕಾಂತೇಗೌಡ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.