ಬೆಂಗಳೂರು: ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ಸಾವಿನ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು ಸೋಮವಾರ ನಗರ ಪೊಲೀಸ್ ಕಮಿಷನರ್ ಎಂ.ಎನ್.ರೆಡ್ಡಿ ಅವರನ್ನು ಭೇಟಿ ಮಾಡಿ ಕೆಲವು ಸೌಲಭ್ಯಗಳನ್ನು ಒದಗಿಸುವಂತೆ ಮನವಿ ಮಾಡಿದ್ದಾರೆ.
ಸಿಬಿಐ ಎಸ್ಪಿ ಬಾಲಸುಬ್ರಹ್ಮಣ್ಯ ನೇತೃತ್ವದ ತಂಡ ಕಮಿಷನರ್ ಅವರನ್ನು ಭೇಟಿ ಮಾಡಿ ತನಿಖೆಗೆ ಅಗತ್ಯವಿರುವ ವಾಹನ, ಅಧಿಕಾರಿಗಳಿಗೆ ಕಚೇರಿ ವ್ಯವಸ್ಥೆ, ವೈಫೈ ಸೌಲಭ್ಯ ಹಾಗೂ ಇತರೆ ತಾಂತ್ರಿಕ ಸೌಲಭ್ಯ ಒದಗಿಸುವಂತೆ ಕೇಳಿಕೊಂಡಿತು.
ಸಿಬಿಐ ತಂಡ ನಾಲ್ಕು ದಿನಗಳ ಹಿಂದೆ ಸರ್ಕಾರದ ಮುಖ್ಯಕಾರ್ಯದರ್ಶಿ ಕೌಶಿಕ್ ಮುಖರ್ಜಿ ಅವರನ್ನು ಭೇಟಿ ಮಾಡಿ ಸೌಲಭ್ಯಗಳಿಗೆ ಕೋರಿತ್ತು. ತಂಡಕ್ಕೆ ಸೌಲಭ್ಯ ಒದಗಿಸುವಂತೆ ಕಮಿಷನರ್ ಅವರಿಗೆ ಗೃಹ ಇಲಾಖೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಪಟ್ಟನಾಯಕ್ ಸೂಚಿಸಿದ್ದಾರೆ ಎಂದು ಗೊತ್ತಾಗಿದೆ.