ಬೆಂಗಳೂರು: ಪ್ರಶ್ನೋತ್ತರ ಅವಧಿಗೆ ಅಡ್ಡಿಪಡಿಸುವುದನ್ನು ನಿರ್ಬಂಧಿಸಲು ನಿಯಮಗಳಿಗೆ ತಿದ್ದುಪಡಿ ತರುವ ಚಿಂತನೆ ಇದೆ ಎಂದು ವಿಧಾನಪರಿಷತ್ತಿನ ಸಭಾಪತಿ ಡಿ.ಎಚ್.ಶಂಕರಮೂರ್ತಿ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಶುಕ್ರವಾರ ಮಾತನಾಡಿದ ಅವರು, ಪ್ರಶ್ನೋತ್ತರ ಕಲಾಪ ಮೊಟಕುಗೊಳಿಸಿ ಉಳಿದ ವಿಷಯಗಳನ್ನು ಚರ್ಚೆಗೆ ತೆಗೆದುಕೊಳ್ಳುವ ಪದ್ಧತಿಗೆ ಕಡಿವಾಣ ಹಾಕಬೇಕಾಗಿದೆ. ಈ ಕುರಿತು ವಿಧಾನಸಭಾಧ್ಯಕ್ಷ ಕೆ.ಬಿ. ಕೋಳಿವಾಡ ಅವರ ಜೊತೆ ಸಮಾಲೋಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಅಡ್ಡಿಪಡಿಸುವುದನ್ನು ನಿರ್ಬಂಧಿಸಬೇಕಾದರೆ ಉಭಯ ಮಂಡಲಗಳ ಕಾರ್ಯವಿಧಾನ ಮತ್ತು ನಡವಳಿಕೆ ನಿಯಮಗಳಿಗೆ ತಿದ್ದುಪಡಿ ತರಬೇಕಾಗುತ್ತದೆ ಎಂದರು.
‘ಶಾಸಕರು ನಿರ್ದಿಷ್ಟ ಗಂಟೆಗಳ ಕಾಲ ಕಲಾಪದಲ್ಲಿ ಪಾಲ್ಗೊಳ್ಳುವುದನ್ನು ಕಡ್ಡಾಯಗೊಳಿಸಲು ಸಾಧ್ಯವಿಲ್ಲ’ ಎಂದು ಶಂಕರಮೂರ್ತಿ ಅವರು, ಪ್ರಶ್ನೆಯೊಂದಕ್ಕೆ ಉತ್ತರಿಸಿದರು.