ನವದೆಹಲಿ: ವಾಹನಗಳ ಸರಾಗ ಸಂಚಾರಕ್ಕೆ ತೆಗೆದುಕೊಂಡಿರುವ ಕ್ರಮಗಳನ್ನು ವಿವರಿಸುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಕೇಂದ್ರ ಹಾಗೂ ಎಲ್ಲಾ ರಾಜ್ಯ ಸರ್ಕಾರಗಳಿಗೆ ನೋಟಿಸ್ ಜಾರಿಗೊಳಿಸಿದೆ.
ಹೊಸದಾಗಿ ಜಾರಿಗೆ ತಂದ ರಸ್ತೆ ಬದಿ ವ್ಯಾಪಾರಿಗಳ (ಜೀವನಾಧಾರ ರಕ್ಷಣೆ ಮತ್ತು ಬೀದಿ ವ್ಯಾಪಾರಿಗಳ ನಿಯಂತ್ರಣ) ಕಾಯ್ದೆ 2014ರ ಅಡಿಯಲ್ಲಿ ರಸ್ತೆ ಮತ್ತು ಪಾದಚಾರಿ ಮಾರ್ಗಗಳ ಒತ್ತುವರಿ ಕುರಿತು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೈಗೊಂಡಿರುವ ಕ್ರಮಗಳ ಬಗ್ಗೆ 10 ವಾರಗಳ ಒಳಗೆ ವಿವರ ನೀಡುವಂತೆ ಕೋರ್ಟ್ ಆದೇಶಿಸಿದೆ.
ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಂಡ ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ಆರ್.ಎಂ. ಲೋಧಾ ಮತ್ತು ನ್ಯಾಯಮೂರ್ತಿ ಕುರಿಯನ್ ಜೋಸೆಫ್ ಹಾಗೂ ಆರ್.ಎಫ್. ನಾರಿಮನ್ ಅವರನ್ನು ಒಳಗೊಂಡ ಪೀಠವು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಈ ನೋಟಿಸ್ ಜಾರಿಗೊಳಿಸಿದೆ.