ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಿಂದ ಮಾಗಡಿ ರಸ್ತೆ ಪ್ರವೇಶ ದ್ವಾರದವರೆಗಿನ 4.8 ಕಿ.ಮೀ. ಉದ್ದದ ಸುರಂಗ ಮಾರ್ಗದಲ್ಲಿ ಮೆಟ್ರೊ ರೈಲು ಸಂಚಾರಕ್ಕೆ ಶುಕ್ರವಾರ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೇಂದ್ರ ನಗರಾಭಿವೃದ್ಧಿ ಸಚಿವ ವೆಂಕಯ್ಯ ನಾಯ್ಡು ಅವರು ವಿಧಾನಸೌಧದ ಎದುರು ಹಸಿರು ನಿಶಾನೆ ತೋರಿದರು.
ಇದರೊಂದಿಗೆ ‘ನಮ್ಮ ಮೆಟ್ರೊ’ದ ಪೂರ್ವ–ಪಶ್ಚಿಮ ಕಾರಿಡಾರ್ನಲ್ಲಿ ಬೈಯಪ್ಪನಹಳ್ಳಿಯಿಂದ ಮೈಸೂರು ರಸ್ತೆಯ ನಾಯಂಡಹಳ್ಳಿ ಜಂಕ್ಷನ್ವರೆಗಿನ ಒಟ್ಟು 18 ಕಿ.ಮೀ. ಉದ್ದದ ಮಾರ್ಗದಲ್ಲಿ ಸಂಪೂರ್ಣ ಸಂಚಾರ ಸಾಧ್ಯವಾಗಿದೆ.
ಸುರಂಗ ಮಾರ್ಗದಲ್ಲಿ ಶನಿವಾರ ಬೆಳಿಗ್ಗೆ ವಾಣಿಜ್ಯ ಸಂಚಾರ ಆರಂಭವಾಗಲಿದೆ. ಮೈಸೂರು ರಸ್ತೆಯ ನಾಯಂಡಹಳ್ಳಿ ಜಂಕ್ಷನ್ನಿಂದ ಬೈಯಪ್ಪನಹಳ್ಳಿ ವರೆಗೆ ಪ್ರಯಾಣ ದರ ₹ 40.
4.8 ಕಿ.ಮೀ. ಉದ್ದದ ಸುರಂಗ ಮಾರ್ಗವನ್ನು ಜನರ ಉಪಯೋಗಕ್ಕೆ ಲೋಕಾರ್ಪಣೆ ಮಾಡುತ್ತಿದ್ದೇವೆ. ಇದರಲ್ಲಿ 5 ನಿಲ್ದಾಣಗಳಿವೆ. ವಿಧಾನ ಸೌಧದ ಮುಂಭಾಗದ ನಿಲ್ದಾಣಕ್ಕೆ ಡಾ.ಬಿ.ಆರ್. ಅಂಬೇಡ್ಕರ್ ಅವರ ಹೆಸರು ಇಡಲಾಗಿದೆ. ಮಹಾತ್ಮ ಗಾಂಧಿ ನಿಲ್ದಾಣದಿಂದ ಮೆಜೆಸ್ಟಿಕ್ ನಿಲ್ದಾಣದ ವರೆಗೆ ಸಂಚಾರ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮೆಟ್ರೊ ರೈಲಿನಿಂದ ಸಂಚಾರ ಸಮಸ್ಯೆ ಬಗೆಹರಿಯುವುದಿಲ್ಲ. ಸಬ್ ಅರ್ಬನ್ ರೈಲು ಕೂಡ ಬೆಂಗಳೂರಿಗರ ಕನಸು ಎಂದು ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಸಚಿವ ಕೆ.ಜೆ. ಜಾರ್ಜ್ ಹೇಳಿದರು.
ಮೆಟ್ರೊ ಕಾಮಗಾರಿಗೆ ಕೇಂದ್ರ ಸರ್ಕಾರ ₹ 2,500 ಕೋಟಿ ನೀಡಿದೆ. 2ನೇ ಹಂತಕ್ಕೆ ಕೇಂದ್ರ ಸರ್ಕಾರದಿಂದ ₹ 4.5 ಸಾವಿರ ಕೋಟಿ ನೀಡುವುದಾಗಿ ಪ್ರಧಾನಿ ಭರವಸೆ ನೀಡಿದ್ದಾರೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಅನಂತ ಕುಮಾರ್ ಹೇಳಿದರು.