ಬೆಂಗಳೂರು: ‘ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರು ಮತ್ತು ಕಾಯಂ ಉಪನ್ಯಾಸಕರು ಎಂದು ತಾರತಮ್ಯ ಮಾಡದೆ, ಈಗಿರುವ ಅತಿಥಿ ಉಪನ್ಯಾಸಕರನ್ನು ಕಾಯಂಗೊಳಿಸಬೆಕು’ ಎಂದು ಚಿಂತಕ ಪ್ರೊ.ಜಿ.ಕೆ.ಗೋವಿಂದರಾವ್ ಅವರು ಹೇಳಿದರು. ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘವು ನಗರದಲ್ಲಿ ಭಾನುವಾರ ಏರ್ಪಡಿಸಿದ್ದ ವೇತನ ಹೆಚ್ಚಳ ಮತ್ತು ಸೇವಾ ಭದ್ರತೆಗಾಗಿ ಹಕ್ಕೊತ್ತಾಯ ಸಮಾವೇಶದಲ್ಲಿ ಅವರು ಮಾತನಾಡಿದರು.
‘ಮಿಲಿಟರಿ ಕ್ಷೇತ್ರಕ್ಕೆ ಸಾವಿರಾರು ಕೋಟಿ ರೂಪಾಯಿ ವೆಚ್ಚ ಮಾಡಲಾಗುತ್ತಿದೆ. ಆದರೆ, ವಿದ್ಯಾರ್ಥಿಗಳ ಮನಸ್ಸು, ಬುದ್ಧಿ ವಿಕಾಸಗೊಳಿಸಲು ಶ್ರಮಿಸುವ ಶಿಕ್ಷಕರು ಅಭದ್ರತೆಯನ್ನು ಎದುರಿಸುತ್ತಿದ್ದಾರೆ. ಇದು ಸರ್ಕಾರದ ಗಮನಕ್ಕೆ ಬರುತ್ತಿಲ್ಲ. ಈ ನೀತಿ ಬದಲಾಗಬೇಕು’ ಎಂದರು.
ರಾಜ್ಯ ಸರ್ಕಾರವು ಶಿಕ್ಷಕರ ಬಗ್ಗೆ ಕಾಳಜಿ ವಹಿಸುತ್ತಿಲ್ಲ.
ಗಾಂಧಿ, ಅಂಬೇಡ್ಕರ್ ಅವರ ಆದರ್ಶಗಳ ಬಗ್ಗೆ ಮಾತನಾಡುವ ನಮ್ಮ ಪ್ರತಿನಿಧಿಗಳು, ಶಿಕ್ಷಕರ ನೈತಿಕ ಸ್ಥೈರ್ಯ ಕುಗ್ಗಿಸುವ ಕೆಲಸ ಮಾಡುತ್ತಿದ್ದಾರೆ. ಶಿಕ್ಷಕರ ಬದುಕಿಗೆ ಭದ್ರತೆ ಇಲ್ಲದಿದ್ದರೆ ಅವರು ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಸಾಧ್ಯವಿಲ್ಲ ಎಂದು ಹೇಳಿದರು.
ಶಿಕ್ಷಕರು ತಮ್ಮ ಕೆಲಸವನ್ನು ಬದ್ಧತೆಯಿಂದ ಮಾಡಿ ತಮಗೆ ಸಿಗಬೇಕಾದ ಸೌಲಭ್ಯಗಳನ್ನು ಧೈರ್ಯದಿಂದ ಕೇಳುವ ಮನೋಭಾವ ಬೆಳೆಸಿಕೊಳ್ಳಬೇಕು. ಅವರೂ ಈ ನಾಡಿನ ನಾಗರಿಕರು ಎಂಬುದನ್ನು ಸರ್ಕಾರ ಮರೆಯಬಾರದು ಎಂದರು.
ಸಂಘದ ಕಾರ್ಯದರ್ಶಿ ಡಾ.ಮಲ್ಲಿಕಾರ್ಜುನ ಬಿ.ಮಾನ್ಪಡೆ ಮಾತನಾಡಿ, ‘ರಾಜ್ಯದ ಪದವಿ ಕಾಲೇಜುಗಳಲ್ಲಿ 11,658 ಮಂದಿ ಅತಿಥಿ ಉಪನ್ಯಾಸಕರು ಕೆಲಸ ಮಾಡುತ್ತಿದ್ದಾರೆ. ಪದವಿ ಕಾಲೇಜುಗಳಿಗೆ ಹೊಸದಾಗಿ ನೇಮಕ ಮಾಡಿಕೊಳ್ಳದೆ ಈಗಿರುವ ಅತಿಥಿ ಉಪನ್ಯಾಸಕರನ್ನು ಸೇವಾ ಹಿರಿತನದ ಆಧಾರದ ಮೇಲೆ ಕಾಯಂಗೊಳಿಸಬೇಕು’ ಎಂದು ಒತ್ತಾಯಿಸಿದರು.
ಉಪನ್ಯಾಸಕರನ್ನು ಕಾಯಂಗೊಳಿಸುವವರೆಗೂ ಈಗಿರುವ ಅತಿಥಿ ಉಪನ್ಯಾಸಕರನ್ನು ಮುಂದಿನ ಶೈಕ್ಷಣಿಕ ವರ್ಷದವರೆಗೆ ಮುಂದುವರಿಸಬೇಕು. ಮಾಸಿಕ ₨ 25 ಸಾವಿರ ವೇತನ ನೀಡಬೇಕು ಎಂದು ಹೇಳಿದರು.