ಬೆಂಗಳೂರು: ‘ಸರ್ಕಾರದ ಭಾಗವಾಗಿ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಸ್ವಯಂ ಸೇವಾ ಸಂಸ್ಥೆಗಳು ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ ಸವಲತ್ತುಗಳನ್ನು ವಿತರಿಸುತ್ತಿವೆ’ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲ್ಕೆರೆ ಎಲ್.ನಾರಾಯಣ ಸ್ವಾಮಿ ಅವರು ಶ್ಲಾಘಿಸಿದರು.
ಯುನಿಕ್ ಹ್ಯೂಮನ್ ರೈಟ್ಸ್ ಸಂಸ್ಥೆ ವತಿಯಿಂದ ಕೆ.ಆರ್.ಪುರದಲ್ಲಿ ಭಾನುವಾರ ಆಯೋಜಿಸಿದ್ದ ವಿವಿಧ ಸವಲತ್ತುಗಳನ್ನು ವಿತರಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ‘ಸಮಾಜದ ಒಳಿತಿಗಾಗಿ ಸೇವೆ ಸಲ್ಲಿಸುತ್ತಿರುವ ಪ್ರಾಮಾಣಿಕ ಸಂಘಟನೆ ಗಳನ್ನು ಸರ್ಕಾರ ಗುರುತಿಸಿ ಪ್ರೋತ್ಸಾ ಹಿಸಬೇಕು. ಉಳ್ಳವರು ಕೂಡ ಸೇವಾ ಸಂಸ್ಥೆಗಳ ಜೊತೆ ಕೈ ಜೋಡಿಸಿ ಸಮಾಜದ ಅಭಿವೃದ್ಧಿಯಲ್ಲಿ ಪಾಲುದಾರರಾಗಬೇಕು’ ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪುಸ್ತಕ, ಬ್ಯಾಗ್, ಮಹಿಳೆಯರಿಗೆ ಟೈಲರಿಂಗ್ ಯಂತ್ರ, ಅಂಗವಿಕಲರಿಗೆ ಗಾಲಿ ಕುರ್ಚಿ ವಿತರಿಸಲಾಯಿತು.
ಉಚಿತ ಆರೋಗ್ಯ ತಪಾಸಣೆ ಶಿಬಿರ. ಜಾದೂ, ನೃತ್ಯ ಪ್ರದರ್ಶನಗಳು ಮತ್ತು ‘ಬಡವರ ಬಂಧು’ ನಾಟಕ ಏರ್ಪಡಿಸಲಾಗಿತ್ತು.