ನವದೆಹಲಿ (ಐಎಎನ್ಎಸ್): ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ನಿಧಿಯನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ದೆಹಲಿ ಕೋರ್ಟ್ ಗುರುವಾರ ಸಮನ್ಸ್ ಜಾರಿಗೊಳಿಸಿದೆ.
ಬಿಜೆಪಿಯ ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿದ್ದ ಖಾಸಗಿ ದೂರನ್ನು ವಿಚಾರಣೆ ನಡೆಸಿದ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಗೋಮತಿ ಮನೋಚಾ ಸಮನ್ಸ್ ಜಾರಿಗೊಳಿಸಿದರು.
ಆಗಸ್ಟ್ 7ರ ಒಳಗೆ ವಿಚಾರಣೆಗೆ ಹಾಜರಾಗುವಂತೆ ಸೋನಿಯಾ ಹಾಗೂ ರಾಹುಲ್ಗೆ ಕೋರ್ಟ್ ಆದೇಶಿಸಿದೆ. ಸೋನಿಯಾ, ರಾಹುಲ್ ಅವರನ್ನು ಹೊರತುಪಡಿಸಿ ಇನ್ನೂ ಐವರಿಗೆ ಕೋರ್ಟ್ ಸಮನ್ಸ್ ಜಾರಿಗೊಳಿಸಿದೆ.
ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರು 1938ರಲ್ಲಿ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಪ್ರಾರಂಭಿಸಿದ್ದರು. 2008ರಲ್ಲಿ ಈ ಪತ್ರಿಕೆ ಸ್ಥಗಿತಗೊಂಡಿತ್ತು. ಈ ಪತ್ರಿಕೆಗೆ ಸೇರಿದ ₨2 ಸಾವಿರ ಕೋಟಿ ನಿಧಿಯನ್ನು ಸೋನಿಯಾ ಮತ್ತು ರಾಹುಲ್ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಸುಬ್ರಮಣಿಯನ್ ಸ್ವಾಮಿ ಆರೋಪಿಸಿದ್ದಾರೆ.