ಬೆಂಗಳೂರು: ‘ಕೇಂದ್ರ ಸರ್ಕಾರದ ಸ್ಮಾರ್ಟ್ ಸಿಟಿ ಯೋಜನೆಯಡಿ ಆಯ್ಕೆಗೊಂಡಿರುವ ನಗರಗಳಲ್ಲಿ ಹಸಿರೀಕರಣಕ್ಕೆ ಹೆಚ್ಚು ಒತ್ತು ಕೊಡುವಂತೆ ನಗರಾಭಿವೃದ್ಧಿ ಸಚಿವರಿಗೆ ಮನವಿ ಮಾಡಲಾಗುವುದು’ ಎಂದು ಕೇಂದ್ರ ರಸಗೊಬ್ಬರ ಸಚಿವ ಅನಂತಕುಮಾರ್ ಹೇಳಿದರು.
ಗಾರ್ಡನ್ ಸಿಟಿ ಫಾರ್ಮರ್ಸ್ ಸಂಸ್ಥೆ ವತಿಯಿಂದ ನಗರದಲ್ಲಿ ಭಾನುವಾರ ಆಯೋಜಿಸಿದ್ದ ‘ಊಟ ಫ್ರಮ್ ಯುವರ್ ತೋಟ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಗರದಲ್ಲಿ 30 ವರ್ಷಗಳ ಹಿಂದೆ ಒಬ್ಬ ವ್ಯಕ್ತಿಗೆ ಏಳು ಮರಗಳಿದ್ದವು. ಈಗ ಏಳು ಮಂದಿಗೆ ಒಂದು ಮರವಿದೆ. ಇದು ನಗರದಲ್ಲಿ ಆಗಿರುವ ಪರಿಸರ ನಾಶಕ್ಕೆ ಸಾಕ್ಷಿ ಎಂದರು.
ನಗರದಲ್ಲಿ ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯಲಾಗುತ್ತಿದೆ. ಇದರಿಂದ ಮುಂದೆ ಪ್ರತಿಕೂಲ ಪರಿಣಾಮ ಎದುರಿಸಬೇಕಾಗುತ್ತದೆ. ಪರಿಸರ ರಕ್ಷಣೆ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸುವ ವಿಷಯಗಳನ್ನು ಪಠ್ಯದಲ್ಲಿ ಅಳವಡಿಸಬೇಕು ಎಂದು ಹೇಳಿದರು.
ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಜಿ.ಕೆ.ವೀರೇಶ್ ಅವರು ಮಾತನಾಡಿ, ‘ರಸಗೊಬ್ಬರ, ಕ್ರಿಮಿನಾಶಕ ಬಳಕೆಯಿಂದಾಗಿ ಭೂಮಿಯ ಫಲವತ್ತತೆ ಹಾಳಾಗುತ್ತಿದೆ. ಇದು ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ. ಹೀಗಾಗಿ ಸಾವಯವ ಕೃಷಿ ಪದ್ಧತಿ ಅಳವಡಿಸಿಕೊಳ್ಳಬೇಕು’ ಎಂದರು.
ಕಾರ್ಯಕ್ರಮದಲ್ಲಿ ಸಾವಯವ ಕೃಷಿಕ ನಂಜನಗೂಡಿನ ಸಿದ್ರಾಜಪ್ಪ, ನಗರದ ಕ್ಲೇರ್ ರಾವ್ ಮತ್ತು ಧಾರವಾಡದ ವರ್ಷಾ ಸ್ಯಾಮ್ಯುಯಲರನ್ನು ಸನ್ಮಾನಿಸಲಾಯಿತು.