ಬೆಂಗಳೂರು: ಅತ್ಯಾಚಾರದ ಆರೋಪ ಎದುರಿಸುತ್ತಿರುವ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿಯವರ ಪ್ರಕರಣದ ವಿಚಾರಣೆಯಿಂದ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರಿದ್ದ ಏಕಸದಸ್ಯ ಪೀಠವು ಹಿಂದೆ ಸರಿದಿದೆ.
ಗುರುವಾರ ಪ್ರಕರಣದ ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಕೆ.ಜಿ.ರಾಘವನ್ ಅವರು, ‘ನೊಂದ ಮಹಿಳೆ ರಾಮಕಥಾ ಗಾಯಕಿಯು ರಾಷ್ಟ್ರಪತಿ ಅವರಿಗೆ ಪತ್ರ ಬರೆದಿದ್ದಾರೆ. ಈ ನ್ಯಾಯಾಲಯದ ಮೇಲೆ ವಿಶ್ವಾಸ ಇಲ್ಲ ಎಂದು ದೂರಿದ್ದಾರೆ. ಇದರಿಂದ ಅರ್ಜಿದಾರರಿಗೆ ತುಂಬಾ ಬೇಸರವಾಗಿದೆ’ ಎಂದರು.
ಈ ಮಾತಿಗೆ ದನಿಗೂಡಿಸಿದ ನ್ಯಾಯಮೂರ್ತಿಗಳು ‘ನನಗೂ ಇದರಿಂದ ಬೇಸರವಾಗಿದೆ. ನಾನು ಈ ಪ್ರಕರಣದ ವಿಚಾರಣೆ ನಡೆಸುವುದಿಲ್ಲ’ ಎಂದು ಹೇಳಿ ವಿಚಾರಣೆಯಿಂದ ಹಿಂದೆ ಸರಿಯುತ್ತಿರುವುದಾಗಿ ಘೋಷಿಸಿದರು.
ಅಡ್ವೊಕೇಟ್ ಜನರಲ್ ಪ್ರೊ.ರವಿವರ್ಮ ಕುಮಾರ್ ಮಧ್ಯ ಪ್ರವೇಶಿಸಿ, ‘ನ್ಯಾಯಮೂರ್ತಿಗಳು ವಿಚಾರಣೆ ಮುಂದುವರಿಸಬೇಕು. ಹಿಂದೆ ಸರಿಯಬಾರದು’ ಎಂದು ಮನವಿ ಮಾಡಿದರು.