ಬೆಂಗಳೂರು: ‘ಪ್ರಧಾನಿ ನರೇಂದ್ರ ಮೋದಿ ಅವರು ಹಿಟ್ಲರ್ ರೀತಿಯಲ್ಲಿ ಸರ್ವಾಧಿಕಾರಿ ಆಗುವತ್ತ ಸಾಗುತ್ತಿದ್ದಾರೆ. ದೇಶದ ಜನರು ಮುಂದೆ ಕೆಟ್ಟ ದಿನಗಳನ್ನು ಎದುರಿಸಬೇಕಾಗಬಹುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಮತ್ತು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜನ್ಮದಿನ
ಸಮಾರಂಭದಲ್ಲಿ ಮಾತನಾಡಿದ ಅವರು, ‘ಮೋದಿ ಅವರು ಸಚಿವರ ಸಹಾಯದಿಂದ ಕೇಂದ್ರ ಸರ್ಕಾರವನ್ನು ನಡೆಸುತ್ತಿಲ್ಲ. ಸಚಿವರ ಅಧಿಕಾರ ಮೊಟಕುಗೊಳಿಸಿ, ಅಧಿಕಾರಿಗಳ ನೆರವಿನಲ್ಲಿ ಆಡಳಿತ ನಡೆಸುತ್ತಿದ್ದಾರೆ. ಇದು ಅವರ ಸರ್ವಾಧಿಕಾರಿ ಧೋರಣೆಗೆ ಸಾಕ್ಷಿ’ ಎಂದರು.
‘ಮೂರು ತಿಂಗಳ ಅವಧಿಯಲ್ಲೇ ಮೋದಿ ಅವರು ಹಿಟ್ಲರ್ ರೀತಿ ಆಗಿದ್ದಾರೆ. ಅವರ ಸುತ್ತ ಇರುವವರು ಗೋಬೆಲ್ಸ್ನಂತೆ ನಡೆದುಕೊಳ್ಳುತ್ತಿದ್ದಾರೆ. ಸುಳ್ಳು ಹೇಳಿ, ಜನರನ್ನು ದಿಕ್ಕುತಪ್ಪಿಸಿ ಪ್ರಧಾನಿ ಆದ ಮೋದಿ ಅವರು ಈಗ ದೇಶವನ್ನು ಸರ್ವಾಧಿಕಾರಿ ಆಡಳಿತದ ನೆರಳಿಗೆ ಕೊಂಡೊಯ್ಯಲು ಯತ್ನಿಸುತ್ತಿದ್ದಾರೆ’ ಎಂದು ಟೀಕಾಪ್ರಹಾರ ನಡೆಸಿದರು.
‘ಈ ವಿಷಯವನ್ನು ಮಾತನಾಡಬಾರದು ಅಂದುಕೊಂಡಿದ್ದೆ. ಆದರೆ, ಸುಮ್ಮನೆ ಇರಲು ಸಾಧ್ಯವಿಲ್ಲ. ಹಾಗಾಗಿ ಮಾತನಾಡಲೇಬೇಕಾಗಿದೆ. ಮಾತು ಮಾತಿಗೂ ಗುಜರಾತ್ ಮಾದರಿ ಎನ್ನುತ್ತಾರೆ. ಎಲ್ಲಿದೆ ಗುಜರಾತ್ ಮಾದರಿ? ಹಾಗೆಂದರೆ ಏನು? ಪ್ರಮುಖ ಕ್ಷೇತ್ರಗಳಲ್ಲಿ ಹಿಂದುಳಿದಿರುವ ರಾಜ್ಯವನ್ನು ಮಾದರಿ ಎಂದು ಒಪ್ಪಿಕೊಳ್ಳುವುದು ಹೇಗೆ?’ ಎಂದು ಪ್ರಶ್ನಿಸಿದರು.
ಗೌರವ ನೀಡುತ್ತಿಲ್ಲ: ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಮಾತನಾಡಿ, ‘ದೇವರಾಜ ಅರಸು ಅವರ ಗರಡಿಯಲ್ಲಿ ಪಳಗಿದ ಅನೇಕರು ಪ್ರಭಾವಿ ನಾಯಕರಾಗಿ ಬೆಳೆದರು. ಆದರೆ, ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯುತ್ತಿಲ್ಲ’ ಎಂದು ಅವರು ಬೇಸರ ವ್ಯಕ್ತಪಡಿಸಿದರು.
ಯುಪಿಎ ಅಧಿಕಾರದಲ್ಲಿ ಇದ್ದಾಗ ಜಾರಿಗೆ ತಂದ ಜನಪರ ಯೋಜನೆ ಗಳಿಗೆ ಸರಿಯಾದ ಪ್ರಚಾರ ನೀಡದ ಕಾರಣ ಲೋಕಸಭಾ ಚುನಾವಣೆಯಲ್ಲಿ ಹಿನ್ನಡೆ ಅನುಭವಿಸಿತು. ರಾಜ್ಯ ಸರ್ಕಾರ ಆ ರೀತಿಯ ತಪ್ಪು ಮಾಡಬಾರದು. ರಾಜ್ಯ ಸರ್ಕಾರದ ಯೋಜನೆಗಳ ಪ್ರಚಾರಕ್ಕೆ ಶೀಘ್ರದಲ್ಲಿ ಕಾರ್ಯಕ್ರಮವೊಂದನ್ನು ಹಮ್ಮಿಕೊಳ್ಳಲಾಗುವುದು ಎಂದರು.