ಮಂಡ್ಯ: ಪ್ರೇಮ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಹುಲಿವಾನ ಗ್ರಾಮದಲ್ಲಿ ಗುರುವಾರ ರಾತ್ರಿ ಕಲ್ಲು ತೂರಾಟ ಮಾಡಿದ ಘಟನೆ ನಡೆದಿದೆ. ಗುಂಪು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.
ಅಂತರಜಾತಿ ಪ್ರೇಮ ಪ್ರಕರಣ ಬೆಳಕಿಗೆ ಬಂದಿದ್ದರಿಂದ ಬುಧವಾರ ರಾತ್ರಿಯಿಂದಲೇ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಶಾಂತಿ ಕಾಪಾಡಲು ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಈ ನಡುವೆಯೂ ಗುರುವಾರ ರಾತ್ರಿ ಗ್ರಾಮದಲ್ಲಿ ಕಲ್ಲು ತೂರಾಟದ ಘಟನೆ ನಡೆದಿದೆ.
ಅಲ್ಲದೆ, ಜತೆಗೆ ವಾಹನವೊಂದಕ್ಕೆ ಬೆಂಕಿ ಹಚ್ಚಲಾಗಿದೆ ಎಂದು ತಿಳಿದು ಬಂದಿದೆ. ಉದ್ರಿಕ್ತರಾಗಿದ್ದ ಜನರ ಗುಂಪು ಚದುರಿಸಲು ಪೊಲೀಸರು ಲಾಠಿ ಪ್ರಹಾರ ಮಾಡಿದ್ದು, ಕೆಲವರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೂಷಣ್ ಬೊರಸೆ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.