ಬೆಂಗಳೂರು: ‘ಜಿಲ್ಲಾಧಿಕಾರಿಯೊಬ್ಬರ ಅಧಿಕಾರವನ್ನು ಹೆಚ್ಚುವರಿ ಜಿಲ್ಲಾಧಿಕಾರಿಗೆ ಹಂಚುವ ಅಧಿಕಾರ ಸರ್ಕಾರಕ್ಕೆ ಇಲ್ಲ’ ಎಂದು ಹೈಕೋರ್ಟ್ ಹೇಳಿದೆ.
ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮಂಗಳವಾರ ವಿಲೇವಾರಿ ಮಾಡಿದ ಮುಖ್ಯ ನ್ಯಾಯಮೂರ್ತಿ ಡಿ.ಎಚ್.ವಘೇಲಾ ಹಾಗೂ ನ್ಯಾಯಮೂರ್ತಿ ಅಶೋಕ ಬಿ.ಹಿಂಚಿಗೇರಿ ಅವರಿದ್ದ ವಿಭಾಗೀಯ ನ್ಯಾಯಪೀಠವು ಈ ಸಂಬಂಧ ಮಹತ್ವದ ಆದೇಶ ಪ್ರಕಟಿಸಿತು.
ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ ಈತನಕ ಕಾರ್ಯ ನಿರ್ವಹಿಸಿದ್ದ ಹೆಚ್ಚುವರಿ ಜಿಲ್ಲಾಧಿಕಾರಿಗಳ ಕರ್ತವ್ಯ ಕಾನೂನು ಬಾಹಿರ ಎಂದು ಅರ್ಜಿದಾರರು ದೂರಿದ್ದರು.
‘ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಯಲ್ಲಿ ಸರ್ಕಾರಿ ಜಮೀನುಗಳ ವಿವಾದ ಬಗೆಹರಿಸುವುದಕ್ಕಾಗಿ ಸರ್ಕಾರ ಹೆಚ್ಚುವರಿ ಜಿಲ್ಲಾಧಿಕಾರಿಯನ್ನು ನೇಮಕ ಮಾಡಿದೆ. ಆದರೆ ಈ ಹೆಚ್ಚುವರಿ ಜಿಲ್ಲಾಧಿಕಾರಿಗಳು ಭೂ ಪರಿವರ್ತನಾ ದಾಖಲೆಗಳನ್ನು (ಮ್ಯುಟೇಶನ್) ಪರಭಾರೆ ಮಾಡುವಲ್ಲಿ ಕೋಟ್ಯಂತರ ರೂಪಾಯಿಗಳ ಅಕ್ರಮ ಎಸಗಿದ್ದಾರೆ. ಆದಾಗ್ಯೂ ಹೆಚ್ಚುವರಿ ಜಿಲ್ಲಾಧಿಕಾರಿಗೆ ಜಿಲ್ಲಾಧಿಕಾರಿ
ಯೊಬ್ಬರ ಅಧಿಕಾರಗಳನ್ನು ಮರುಹಂಚಿಕೆ ಮಾಡುವಂತಿಲ್ಲ. ಇದು ಸಂಪೂರ್ಣ ನಿಯಮ ಬಾಹಿರ’ ಎಂದು ಅರ್ಜಿದಾರರು ನ್ಯಾಯಪೀಠದ ಗಮನ ಸೆಳೆದಿದ್ದರು.