ಶಿರ್ವ: ‘ಶಿಕ್ಷಣ ಸಂಸ್ಥೆಗಳ ಮೂಲಭೂತ ಸೌಕರ್ಯಗಳಿಗಾಗಿ ಸರ್ವ ಶಿಕ್ಷಣ ಅಭಿಯಾನದಡಿ ಕೇಂದ್ರ ಸರ್ಕಾರ ₨ 28,650 ಕೋಟಿ ಬಜೆಟಿನಲ್ಲಿ ಮೀಸಲಿರಿಸಿದ್ದು, ಅದರಲ್ಲಿ ಉಡುಪಿ ಜಿಲ್ಲೆಗೆ ಸುಮಾರು ₨ 15 ಕೋಟಿ ಅನುದಾನ ಬರಲಿದೆ’ ಎಂದು ಉಡುಪಿ ಜಿಲ್ಲಾ ಪಂಚಾಯಿತಿ ಸದಸ್ಯ ಕಟಪಾಡಿ ಶಂಕರ ಪೂಜಾರಿ ಹೇಳಿದರು.
ಶತಮಾನೋತ್ಸವ ಕಂಡಿರುವ ಕಟಪಾಡಿಯ ಏಣಗುಡ್ಡೆ ದುರ್ಗಾಪರಮೇಶ್ವರಿ ಹಿರಿಯ ಪ್ರಾಥಮಿಕ ಶಾಲೆಯ ಅಕ್ಷರ ದಾಸೋಹ ಕಟ್ಟಡವನ್ನು ಇತ್ತೀಚೆಗೆ ಉದ್ಘಾಟಿಸಿ ಮಾತನಾಡಿದರು.
‘ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಚರ್ಚಿಸಿ, ಶೌಚಾಲಯವೂ ಸೇರಿದಂತೆ ಮೂಲಭೂತ ಸೌಕರ್ಯಗಳ ಕೊರತೆ ಅನುಭವಿಸುತ್ತಿರುವ ಶಾಲೆಗಳ ಸಮೀಕ್ಷೆ ನಡೆಸಿ ಮುಂದಿನ ದಿನಗಳಲ್ಲಿ ಅನುದಾನವನ್ನು ಸಮರ್ಪಕವಾಗಿ ಮತ್ತೆ ಉಪಯೋಗಿಸುವ ನಿಟ್ಟಿನಲ್ಲಿ ಯತ್ನಿಸಲಾಗುವುದು’ ಎಂದು ತಿಳಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ರವಿಶಂಕರ್ ರಾವ್ ಮಾತನಾಡಿದರು. ಕಟಪಾಡಿ ಗ್ರಾ.ಪಂ. ಅಧ್ಯಕ್ಷ ವಿನಯ ಬಲ್ಲಾಳ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ದುರ್ಗಾಪರಮೇಶ್ವರಿ ದೇವಸ್ಥಾನದ ಧರ್ಮದರ್ಶಿ ವೈ. ಭರತ್ ಹೆಗ್ಡೆ, ತಾ.ಪಂ ಸದಸ್ಯ ಶ್ರೀಕರ ಅಂಚನ್, ಮುಖ್ಯ ಶಿಕ್ಷಕಿ ಬೇಬಿ, ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ಕುರ್ಕಾಲು ದಿನಕರ ಶೆಟ್ಟಿ ಇದ್ದರು. ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಮಲ್ಲೇಶಪ್ಪ ಪ್ರಾಸ್ತಾವಿಕ ಮಾತನಾಡಿದರು. ಶಾಲಾ ಸಂಚಾಲಕ ರಂಜನ್ ಹೆಗ್ಡೆ ಸ್ವಾಗತಿಸಿ, ವಂದಿಸಿದರು.