ಬೆಂಗಳೂರು: ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಬಯಲು ಸೀಮೆಗೆ ನೀರು ಒದಗಿಸುವ ಎತ್ತಿನಹೊಳೆ ಯೋಜನೆಯನ್ನು ಐದು ವರ್ಷಗಳಲ್ಲಿ ಪೂರ್ಣಗೊಳಿಸಲಾಗುವುದು ಎಂದು ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ ತಿಳಿಸಿದರು.
ವಿಧಾನ ಪರಿಷತ್ನಲ್ಲಿ ಬುಧವಾರ ಬಿಜೆಪಿ ಸದಸ್ಯ ವೈ.ಎ.ನಾರಾಯಣ ಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ಯೋಜನೆ ಅನುಷ್ಠಾನಕ್ಕೆ ಈಗಾಗಲೇ ₨ 1,143 ಕೋಟಿ ಖರ್ಚಾಗಿದೆ. ₨ 6,500 ಕೋಟಿ ಮೊತ್ತದ ಯೋಜನೆಯು ಐದು ವರ್ಷಗಳಲ್ಲಿ ಪೂರ್ಣಗೊಳ್ಳಲಿದೆ’ ಎಂದರು.
‘ಮಧ್ಯ ಕರ್ನಾಟಕ ಹಾಗೂ ಬಯಲು ಸೀಮೆ ಪ್ರದೇಶಗಳಲ್ಲಿ ಅನುಷ್ಠಾನಗೊ ಳಿಸುತ್ತಿರುವ ನೀರಾವರಿ ಯೋಜನೆಗಳಿಗೆ 2014–15ರಲ್ಲಿ ₨ 4,927 ಕೋಟಿ ಖರ್ಚು ಮಾಡಲಾಗಿದೆ. ಬಯಲು ಸೀಮೆ ಜಿಲ್ಲೆಗಳಲ್ಲಿ 65 ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಸದರಿ ಯೋಜನೆಗಳು ವಿವಿಧ ಹಂತಗಳಲ್ಲಿ ಪ್ರಗತಿಯಲ್ಲಿದೆ’ ಎಂದು ತಿಳಿಸಿದರು.