ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತ ಪೂರ್ವಭಾವಿ ಸಭೆ ಶಾಸಕ ಟಿ. ವೆಂಕಟರಮಣಯ್ಯ ಅಧ್ಯಕ್ಷತೆಯಲ್ಲಿ ತಾಲ್ಲೂಕು ಪಂಚಾಯ್ತಿ ಸಭಾಂಗಣದಲ್ಲಿ ಸೋಮವಾರ ನಡೆಯಿತು.
ಕನ್ನಡ ರಾಜ್ಯೋತ್ಸವ ಕನ್ನಡಿಗರ ಮಹತ್ವದ ಕಾರ್ಯಕ್ರಮ. ಅಧಿಕಾರಿಗಳು ಕನ್ನಡದ ಕಾರ್ಯಕ್ರಮಗಳನ್ನು ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಇವರ ಮೇಲೆ ಶಿಸ್ತಿನ ಕ್ರಮ ಕೈಗೊಳ್ಳಬೇಕು. ಕಾಟಾಚಾರಕ್ಕೆ ರಾಜ್ಯೋತ್ಸವ ಮಾಡುವುದಾದರೆ ಸಹಕಾರ ನೀಡುವುದಿಲ್ಲ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಈ ಬಾರಿ ತಪ್ಪದೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸುವಂತೆ ಶಾಸಕರು ಹಾಗೂ ತಹಶೀಲ್ದಾರರು ಮುಂದಾಳತ್ವ ವಹಿಸಬೇಕು ಎಂದು ಕನ್ನಡಪರ ಸಂಘಟನೆಗಳ ಮುಖಂಡರು ಒತ್ತಾಯಿಸಿದರು.
ಶಾಲಾಕಾಲೇಜುಗಳಲ್ಲಿ ಹಾಗೂ ಕಾರ್ಖಾನೆಗಳಲ್ಲಿ ಕಡ್ಡಾಯವಾಗಿ ಕನ್ನಡ ರಾಜ್ಯೋತ್ಸವ ಆಚರಿಸಲು ಸಂಬಂಧಪಟ್ಟ ಇಲಾಖೆಗಳು ಸುತ್ತೋಲೆ ಹೊರಡಿಸಬೇಕು. ವೇದಿಕೆಯಲ್ಲಿ ಶಿಷ್ಟಾಚಾರ ಪಾಲಿಸಬೇಕು. ತಾಲ್ಲೂಕು ಮಟ್ಟದಲ್ಲಿ ಕನ್ನಡ ಅನುಷ್ಠಾನ ಸಮಿತಿಗಳನ್ನು ರಚಿಸಬೇಕು ಎನ್ನುವ ಸಲಹೆಗಳು ವ್ಯಕ್ತವಾದವು. ರಾಜ್ಯೋತ್ಸವ ಸಮಾರಂಭವನ್ನು ಅರ್ಥಪೂರ್ಣವಾಗಿ ಆಚರಿಸುವ ಕುರಿತು ವೇದಿಕೆ ಸಮಿತಿ, ಸಾಂಸ್ಕೃತಿಕ ಸಮಿತಿ, ಸನ್ಮಾನ ಸಮಿತಿಗಳನ್ನು ರಚಿಸಲಾಯಿತು.
ನಗರದ ಪುರಭವನದಲ್ಲಿ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ನಡೆಸಲು ತೀರ್ಮಾನಿಸಲಾಯಿತು. ಕಲಾತಂಡಗಳೊಂದಿಗೆ ಶ್ರೀಭುವನೇಶ್ವರಿ ದೇವಿಯ ಅದ್ದೂರಿ ಮೆರವಣಿಗೆಯಲ್ಲಿ ಜಾನಪದ ತಂಡಗಳನ್ನು ಕರೆಸಲು ತೀರ್ಮಾನಿಸಲಾಯಿತು.
ಅಧ್ಯಕ್ಷತೆ ವಹಿಸಿದ್ದ ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿ, ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ಅದ್ದೂರಿಯಾಗಿ ಆಚರಿಸಲು ತಮ್ಮ ಸಹಕಾರವಿದೆ. ರಾಜ್ಯೋತ್ಸವ ಆಚರಿಸಲು ಎಲ್ಲಾ ಕನ್ನಡಪರ ಹಾಗೂ ವಿವಿಧ ಸಂಘಟನೆಗಳ ಸಹಕಾರ ಅಗತ್ಯವಾಗಿದೆ. ತಾಲ್ಲೂಕಿನಲ್ಲಿ ಬಿಬಿಎಂಪಿ ಕಸ ವಿಲೇವಾರಿ ಘಟಕ ಸ್ಥಾಪನೆಗೆ ವಿರೋಧ ವ್ಯಕ್ತಪಡಿಸಿದ್ದು, ಸಚಿವರ ಗಮನಕ್ಕೆ ತರಲಾಗಿದೆ ಎಂದರು. ಶಾಲೆಗಳಲ್ಲಿ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ಕ್ರಮ ಕೈಗೊಳ್ಳುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡಲಾಯಿತು.
ಪರಭಾಷೆ ಚಿತ್ರಪ್ರದರ್ಶನಕ್ಕೆ ವಿರೋಧ: ನವೆಂಬರ್ ಪೂರ್ತಿ ಕನ್ನಡ ಚಿತ್ರಗಳನ್ನು ಪ್ರದರ್ಶಿಸುವುದಕ್ಕೆ, ಹೊಸ ಚಲನಚಿತ್ರಗಳು ಸಿಗುವುದಿಲ್ಲ. ಚಿತ್ರಮಂದಿರಗಳಲ್ಲಿ ಪ್ರೇಕ್ಷಕರ ಕೊರತೆಯಿದ್ದು, ತೀರಾ ನಷ್ಟ ಅನುಭವಿಸುವಂತಾಗುತ್ತಿದೆ. ಈ ನಿಟ್ಟಿನಲ್ಲಿ ನ.೧ರಂದು ಮಾತ್ರ ಕನ್ನಡ ಚಿತ್ರಗಳನ್ನು ಪ್ರದರ್ಶಿಸಿ, ಉಳಿದ ಸಮಯದಲ್ಲಿ ಪರಭಾಷಾ ಚಿತ್ರಗಳನ್ನು ಪ್ರದರ್ಶಿಸಲು ಕನ್ನಡಪರ ಸಂಘಟನೆಗಳ ರಾಜಕೀಯ ಪಕ್ಷಗಳ ಕಾರ್ಯಕರ್ತರು ಅನುವು ಮಾಡಿಕೊಡಬೇಕು ಎಂದು ಚಿತ್ರಮಂದಿರದ ಮಾಲೀಕರು ಸಭೆಯಲ್ಲಿ ಮನವಿ ಮಾಡಿದರು.
ಇದಕ್ಕೆ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿ, ಇಡೀ ವರ್ಷ ಪರಭಾಷೆ ಚಿತ್ರಗಳನ್ನು ಪ್ರದರ್ಶಿಸಿ ಹಣ ಗಳಿಸುವ ಚಿತ್ರಮಂದಿರದ ಮಾಲೀಕರು ಒಂದು ತಿಂಗಳು ಕನ್ನಡ ಚಿತ್ರಗಳನ್ನು ಪದರ್ಶಿಸಲು ನಿರ್ಲಕ್ಷಿಸುವುದು ಸರಿಯಲ್ಲ. ಎಂದಿನಂತೆ ನವೆಂಬರ್ನಲ್ಲಿ ಕನ್ನಡ ಚಿತ್ರಗಳನ್ನು ಪ್ರದರ್ಶಿಸಬೇಕು ಎಂದು ಒತ್ತಾಯಿಸಿದರು.
ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷ ಹಾಗೂ ತಹಶೀಲ್ದಾರ್ ಎಂ.ಕೆ.ರಮೇಶ್, ತಾ.ಪಂ ಅಧ್ಯಕ್ಷೆ ಶ್ಯಾಮಲಾ ಲಕ್ಷ್ಮೀಪತಿ, ಎಪಿಎಂಸಿ ಅಧ್ಯಕ್ಷ ತಿ.ರಂಗರಾಜು, ಉಪತಹಸೀಲ್ದಾರ್ ಶಿವರಾಜ್ ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.