ಲಖನೌ (ಪಿಟಿಐ): ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ಆಯಾ ರಾಜ್ಯ ಸರ್ಕಾರಗಳಿಗೆ ಸೇರಿದ್ದು ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಶುಕ್ರವಾರ ತಿಳಿಸಿದ್ದಾರೆ.
ದಾದ್ರಿ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಸಮಾಜವಾದಿ ಪಕ್ಷದ ನಾಯಕ ಮುಲಾಯಂ ಸಿಂಗ್ ಯಾದವ್ ಅವರು ‘ಕೇಂದ್ರ ಸರ್ಕಾರ ಕೂಡಲೇ ಕ್ರಮಕೈಗೊಳ್ಳಬೇಕು. ಇಲ್ಲವಾದಲ್ಲಿ ನಾವು ಸರ್ಕಾರವನ್ನೇ ತ್ಯಾಗ ಮಾಡಬೇಕಾದಿತು’ ಎಂಬ ಹೇಳಿಕೆ ನೀಡಿದ್ದರು.
ಇದಕ್ಕೆ ಪ್ರತಿಕ್ರಿಯಿಸಿದ ರಾಜನಾಥ್ ಸಿಂಗ್ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ಆಯಾ ರಾಜ್ಯ ಸರ್ಕಾರಗಳ ಹೊಣೆ. ಇದರಲ್ಲಿ ಕೆಂದ್ರ ಸರ್ಕಾರ ಭಾಗಿಯಾಗಲು ಸಂವಿಧಾನದಲ್ಲಿ ಅವಕಾಶವಿಲ್ಲ. ಒಂದು ವೇಳೆ ರಾಜ್ಯ ಸರ್ಕಾರ ಸಹಾಯ ಕೋರಿದರೆ ನೆರವು ನೀಡಬಹುದು ಎಂದು ರಾಜನಾಥ್ ಸಿಂಗ್ ತಿಳಿಸಿದ್ದಾರೆ.
ದಾದ್ರಿ ಪ್ರಕರಣದಲ್ಲಿ ಕೆಲವರು ಕೋಮುವಾದ ಸೃಷ್ಟಿ ಮಾಡಿ ಲಾಭ ಪಡೆಯಲು ಯತ್ನಿಸುತ್ತಿದ್ದಾರೆ. ಆರೋಗ್ಯಯುತ ಪ್ರಜಾಪ್ರಭುತ್ವದಲ್ಲಿ ಇಂತಹ ಕೆಲಸ ಮಾಡಬಾರದು ಎಂದು ಸಿಂಗ್ ಹೇಳಿದ್ದಾರೆ.