ಬೆಂಗಳೂರು: ‘ಚುನಾವಣೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ. ಚುನಾವಣೆಯ ಬಳಿಕವೂ ಜನರ ಸಮಸ್ಯೆಗಳಿಗೆ ಸ್ಪಂದಿಸುವುದು ಮುಖಂಡರ ಪ್ರಮುಖ ಕರ್ತವ್ಯ’ ಎಂದು ಸಂಸದ ಪಿ.ಸಿ.ಮೋಹನ್ ತಿಳಿಸಿದರು.
ಮಹದೇವಪುರ ಕ್ಷೇತ್ರದ ಕಾಟಂನಲ್ಲೂರಿನಲ್ಲಿ ಬಿಜೆಪಿ ವತಿಯಿಂದ ಭಾನುವಾರ ಆಯೋಜಿಸಿದ್ದ ಬಿಬಿಎಂಪಿ ಚುನಾವಣೆಯಲ್ಲಿ ಸ್ಪರ್ಧಿಸಿದವರ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.
‘ನಗರದ ಸ್ವಚ್ಛತೆಯನ್ನು ಕಾಪಾಡಲು ಪಾಲಿಕೆಯ ಎಲ್ಲಾ ಸದಸ್ಯರು ಶ್ರಮಿಸಬೇಕು’ ಎಂದು ಹೇಳಿದರು. ಶಾಸಕ ಅರವಿಂದ ಲಿಂಬಾವಳಿ ಮಾತನಾಡಿ, ‘ಸ್ಪಷ್ಟ ಬಹುಮತ ಇಲ್ಲದಿದ್ದರೂ ಕಾಂಗ್ರೆಸ್ ವಾಮಮಾರ್ಗದ ಮೂಲಕ ಪಾಲಿಕೆಯ ಆಡಳಿತ ನಡೆಸುತ್ತಿದೆ. ಈ ಆಡಳಿತವನ್ನು ನಿರೀಕ್ಷಿಸಿರಲಿಲ್ಲ. ಹಾಗಾಗಿ ಈ ಆಡಳಿತ ಹೆಚ್ಚು ದಿನಗಳ ಕಾಲ ಉಳಿಯುವುದಿಲ್ಲ’ ಎಂದು ತಿಳಿಸಿದರು.
ಮಹದೇವಪುರ ಕ್ಷೇತ್ರದ ಬಿಜೆಪಿ ಘಟಕದ ಅಧ್ಯಕ್ಷ ವೆಂಕಟಸ್ವಾಮಿ ರೆಡ್ಡಿ ಮಾತನಾಡಿ, ‘ಈ ಬಾರಿಯ ಬಿಬಿಎಂಪಿ ಚುನಾವಣೆಯಲ್ಲಿ ಕಳೆದ ಬಾರಿಗಿಂತ ಹೆಚ್ಚು ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಹೀಗಾಗಿ ಕ್ಷೇತ್ರದಲ್ಲಿ ಪಕ್ಷ ಮತ್ತಷ್ಟು ಬಲಗೊಂಡಿದೆ ಎಂಬುದು ಸಾಬೀತಾಗಿದೆ’ ಎಂದರು.