ಬೆಂಗಳೂರು: ಮಹತ್ವಾಕಾಂಕ್ಷೆಯ ‘ಟೆಂಡರ್ ಶ್ಯೂರ್’ ಯೋಜನೆಯ ಮೂರನೇ ಪ್ಯಾಕೇಜ್ ಅಡಿ ಜಯನಗರ 11ನೇ ಮುಖ್ಯರಸ್ತೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕೈಗೆತ್ತಿಕೊಂಡಿರುವ ರಸ್ತೆ ಕಾಮಗಾರಿಗೆ ಮಂಗಳವಾರ ಶಂಕುಸ್ಥಾಪನೆ ನೆರವೇರಿಸಲಾಯಿತು.
ಜಯನಗರ ನಾಲ್ಕನೇ ಹಂತದಲ್ಲಿರುವ ಕೂಲ್ ಜಾಯಿಂಟ್ ಜಂಕ್ಷನ್ನಿಂದ ಹೊರವರ್ತುಲ ರಸ್ತೆಯವರೆಗೆ 2.7 ಕಿ.ಮೀ. ಉದ್ದದ ರಸ್ತೆಯನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ. ಬಡಾವಣೆಯ ರಾಘವೇಂದ್ರ ಸ್ವಾಮಿ ದೇವಸ್ಥಾನ ಬಳಿ ಮಂಗಳವಾರ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಕೇಂದ್ರ ರಸಗೊಬ್ಬರ ಹಾಗೂ ರಾಸಾಯನಿಕ ಸಚಿವ ಅನಂತಕುಮಾರ್, ‘ಪ್ರಧಾನಿ ನರೇಂದ್ರ ಮೋದಿ ಕಲ್ಪನೆಯ ಸುಸಜ್ಜಿತ ನಗರದ (ಸ್ಮಾರ್ಟ್ಸಿಟಿ) ಯೋಜನೆಯನ್ನು ಸಾಕಾರಗೊಳಿಸಬೇಕು. ಜಯನಗರ ದೇಶದಲ್ಲೇ ಸ್ಮಾರ್ಟ್ ಬಡಾವಣೆ. ಸ್ಮಾರ್ಟ್ ಬಡಾವಣೆಗೆ ಈಗ ಸ್ಮಾರ್ಟ್ ರಸ್ತೆ ಲಭಿಸಿದೆ’ ಎಂದರು.
ಶಾಸಕ ಬಿ.ಎನ್.ವಿಜಯ ಕುಮಾರ್, ‘ಸಾಕಷ್ಟು ಟ್ರಾಫಿಕ್ ಸಮಸ್ಯೆ ಹೊಂದಿರುವ ಈ ರಸ್ತೆಗೆ ಇಂಥದೊಂದು ಯೋಜನೆ ಅಗತ್ಯವಾಗಿತ್ತು. ನಾಲ್ಕು ವರ್ಷಗಳಿಂದ ಇದಕ್ಕಾಗಿ ಪ್ರಯತ್ನ ನಡೆಸಿದ್ದೆ. ಈಗ ಟೆಂಡರ್ ಶ್ಯೂರ್ ಯೋಜನೆಯಡಿ ರಸ್ತೆಯನ್ನು ಮೇಲ್ದರ್ಜೆಗೇರಿಸಲು ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಜಯನಗರದಲ್ಲಿ ಇದೊಂದು ಮಾದರಿ ರಸ್ತೆಯಾಗಲಿದೆ’ ಎಂದು ತಿಳಿಸಿದರು.
ಮೇಯರ್ ಬಿ.ಎಸ್.ಸತ್ಯನಾರಾಯಣ ಮಾತನಾಡಿ, ‘ನಗರದಲ್ಲಿ ಕೈಗೆತ್ತಿಕೊಂಡಿರುವ ₨ 200 ಕೋಟಿ ಮೊತ್ತದ ಯೋಜನೆಯ ಭಾಗವಿದು. ಜನದಟ್ಟಣೆ ಇರುವ ಪ್ರದೇಶದ ಪ್ರಮುಖ ರಸ್ತೆಗಳಲ್ಲಿ ಟೆಂಡರ್ ಶ್ಯೂರ್ ವ್ಯವಸ್ಥೆಯಡಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ನಗರದ ಒಟ್ಟು 12 ರಸ್ತೆಗಳಲ್ಲಿ ಈ ಯೋಜನೆ ರೂಪಿಸಲಾಗಿದೆ. ಏಳು ರಸ್ತೆಗಳಲ್ಲಿ ಕಾಮಗಾರಿ ಪ್ರಾರಂಭವಾಗಿದೆ. ಇದು ಎಂಟನೆಯದ್ದು. ಮತ್ತೆ ಅಗೆಯಲು ಅವಕಾಶ ಇಲ್ಲದಂತೆ ರಸ್ತೆಗಳನ್ನು ವಿನ್ಯಾಸಗೊಳಿಸುವ ವ್ಯವಸ್ಥೆ ರೂಪಿಸಲಾಗಿದೆ’ ಎಂದರು.
ಏನಿದು ಟೆಂಡರ್ ಶ್ಯೂರ್?
ಮತ್ತೆ ಅಗೆಯಲು ಅವಕಾಶ ಇಲ್ಲದಂತೆ ರಸ್ತೆಗಳನ್ನು ವಿನ್ಯಾಸಗೊಳಿಸುವ ಯೋಜನೆ ಟೆಂಡರ್ ಶ್ಯೂರ್. ಕುಡಿಯುವ ನೀರಿನ ಕೊಳವೆ, ಒಳಚರಂಡಿ ಮಾರ್ಗ, ಬೆಸ್ಕಾಂ ಸಂಪರ್ಕ ಜಾಲ, ಆಪ್ಟಿಕಲ್ ಫೈಬರ್ ಕೇಬಲ್, ಬೀದಿದೀಪ, ಸಿಗ್ನಲ್ ದೀಪ, ಸಿ.ಸಿ ಟಿ.ವಿ ಕೇಬಲ್... ಎಲ್ಲದಕ್ಕೂ ರಸ್ತೆ ಬದಿಯಲ್ಲಿ ಯುಟಿಲಿಟಿ ಡಕ್ಟ್ (ಸೇವಾ ಸಂಪರ್ಕ ಜಾಲದ ನೆಲದಡಿ ಮಾರ್ಗ) ವ್ಯವಸ್ಥೆ ಇರುತ್ತದೆ. ಪಾದಚಾರಿಗಳಿಗೆ ಸಮರ್ಪಕವಾದ ಫುಟ್ಪಾತ್ ಸೌಲಭ್ಯ, ಸೈಕಲ್ ಸವಾರರಿಗೆ ಪ್ರತ್ಯೇಕ ಮಾರ್ಗ, ದೊಡ್ಡ ವಾಹನಗಳು ಮತ್ತು ದ್ವಿಚಕ್ರ ವಾಹನಗಳಿಗೆ ಪ್ರತ್ಯೇಕ ಲೇನ್ ಸೇರಿ ವಿಶೇಷ ಸೌಲಭ್ಯಗಳೂ ಇರುತ್ತವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.