ಪುತ್ತೂರು: ನಿಷ್ಪಕ್ಷಪಾತವಾಗಿ ಕರ್ತವ್ಯ ನಿರ್ವಹಿಸುವ ಪೊಲೀಸ್ ಇಲಾಖೆಯಿಂದ ಸಮಾಜದಲ್ಲಿ ಸಾಮಾಜಿಕ ಸಾಮರಸ್ಯ ನೆಲೆಗೊಳ್ಳಲು ಸಾಧ್ಯ ಎಂದು ರಾಜ್ಯ ಅರಣ್ಯ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಾಮಾನಾಥ ರೈ ಹೇಳಿದರು.
ಅವರು ಬುಧವಾರ ದ.ಕ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಪುತ್ತೂರಿನಲ್ಲಿ ಆರಂಭಿಸಿದ ಪೊಲೀಸ್ ಕ್ಯಾಂಟೀನ್ ಉದ್ಘಾಟಿಸಿ ಮಾತನಾಡಿದರು. ಕೌಟುಂಬಿಕ ಕಲಹ, ಆಸ್ತಿ ವಿವಾದ, ಮತೀಯ ಗಲಭೆಗಳು, ಭೂಗತ ಚಟುವಟಿಕೆಗಳು ಸೇರಿದಂತೆ ಹಲವು ರೀತಿಯಲ್ಲಿನ ಪ್ರಕರಣಗಳ ಹತೋಟಿಯಲ್ಲಿಟ್ಟಕೊಂಡು ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಪೊಲೀಸರಿಂದ ಶಾಂತಿ ಸಾಮರಸ್ಯ ನೆಲೆಗೊಳ್ಳಲು ಸಾಧ್ಯ ಎಂದರು.
ಅಧ್ಯಕ್ಷತೆ ವಹಿಸಿದ್ದ ಶಾಸಕಿ ಶಕುಂತಳಾ ಶೆಟ್ಟಿ ಮಾತನಾಡಿ, ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಪೊಲೀಸರ ಕರ್ತವ್ಯಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಸಿಬ್ಬಂದಿ ಕೊರತೆ, ಶಸ್ತ್ರಾಸ್ತ್ರಗಳ ಪೂರೈಕೆ, ವಸತಿಗೃಹ ಮತ್ತಿತರ ಬೇಡಿಕೆಗಳನ್ನು ಉಸ್ತುವಾರಿ ಸಚಿವರ ಮೂಲಕ ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ಭರವಸೆ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶರಣಪ್ಪ ಮಾತನಾಡಿದರು. ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಪುಲಸ್ತ್ಯಾ ರೈ, ನಗರಸಭಾ ಅಧ್ಯಕ್ಷ ಜಗದೀಶ ಶೆಟ್ಟಿ ನೆಲ್ಲಿಕಟ್ಟೆ, ಸಹಾಯಕ ಆಯುಕ್ತ ಬಸವರಾಜು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶೇಖರಪ್ಪ ಸ್ವಾಗತಿಸಿದರು. ಡಿವೈಎಸ್ಪಿ ಭಾಸ್ಕರ ರೈ, ಪುತ್ತೂರು ನಗರ ಠಾಣಾ ಇನ್ಸ್ಪೆಕ್ಟರ್ ಬಿ.ಕೆ ಮಂಜಯ್ಯ, ಸುಳ್ಯ ಠಾಣಾ ಇನ್ಸ್ಪೆಕ್ಟರ್ ಸತೀಶ್ ಬಿ.ಎನ್, ಮಂಜುಳಾ ಕೆ.ಎನ್ ಅತಿಥಿಗಳನ್ನು ಗೌರವಿಸಿದರು. ಪ್ರೊಬೆಷನರಿ ಐಪಿಎಸ್ ಅಧಿಕಾರಿ ಸುನಂದಿ ವಂದಿಸಿದರು. ನಿವೃತ್ತ ಉಪನ್ಯಾಸಕ ಪ್ರೊ.ಬಿ.ಜೆ.ಸುವರ್ಣ ನಿರೂಪಿಸಿದರು.