ಬೆಂಗಳೂರು: ‘ಕೇಂದ್ರದ ಬಿಜೆಪಿ ಸರ್ಕಾರ ಕೇವಲ ಘೋಷಣೆ ಹಾಗೂ ಭಾಷಣಗಳಿಗೆ ಸೀಮಿತವಾಗಿದೆ’ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.
ಜವಾಹರಲಾಲ್ ನೆಹರೂ ಪುಣ್ಯತಿಥಿ ಅಂಗವಾಗಿ ಶುಕ್ರವಾರ, ವಿಧಾನಸೌಧದ ಆವರಣದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಸಚಿವರು ಸುದ್ದಿಗಾರರ ಜೊತೆ ಮಾತನಾಡಿದರು.
‘ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು ಎರಡು ವರ್ಷಗಳು ಪೂರ್ಣಗೊಂಡಿವೆ. ಚುನಾವಣೆಗೆ ಮುನ್ನ ನೀಡಿದ್ದ ಭರವಸೆಗಳ ಪೈಕಿ ಎಷ್ಟನ್ನು ಬಿಜೆಪಿ ಈಡೇರಿಸಿದೆ’ ಎಂದು ಅವರು ಪ್ರಶ್ನಿಸಿದರು. ‘ನೆಹರೂ ಅವರ ಚಿಂತನೆಗಳು ಎಲ್ಲ ಕಾಲಕ್ಕೂ ಪ್ರಸ್ತುತ. ಕೇವಲ ಕೃಷಿಯಿಂದ ದೇಶವನ್ನು ಮುನ್ನಡೆಸಲು ಸಾಧ್ಯವಿಲ್ಲ ಎಂಬುದನ್ನು ಅರ್ಥೈಸಿಕೊಂಡಿದ್ದ ಅವರು ಕೈಗಾರಿಕಾ ಅಭಿವೃದ್ಧಿಗೂ ಆದ್ಯತೆ ನೀಡಿದ್ದರು’ ಎಂದರು.
ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ ಅವರೂ ನೆಹರೂ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.