ಬೆಂಗಳೂರು: ಬಿಬಿಎಂಪಿಯ 61ನೇ ಆಯುಕ್ತರಾಗಿ ಹಿರಿಯ ಐಎಎಸ್ ಅಧಿಕಾರಿ ಜಿ.ಕುಮಾರ್ ನಾಯಕ್ ಸೋಮವಾರ ಅಧಿಕಾರ ಸ್ವೀಕರಿಸಿದರು.
ನಾಯಕ್ ಅವರನ್ನು ಆಯುಕ್ತರನ್ನಾಗಿ ನೇಮಿಸಿ ರಾಜ್ಯ ಸರ್ಕಾರ ಶನಿವಾರ ಆದೇಶ ಹೊರಡಿಸಿತ್ತು. ಅಧಿಕಾರ ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಇದು ನಗರದ ಸೇವೆ ಮಾಡಲು ನನಗೆ ಸಿಕ್ಕಿರುವ ಅಪೂರ್ವ ಅವಕಾಶ’ ಎಂದರು.
* ಬಿಬಿಎಂಪಿಯಲ್ಲಿ ಯಾವುದಕ್ಕೆ ಆದ್ಯತೆ ನೀಡುತ್ತೀರಿ?
ಆದಾಯ ಸಂಗ್ರಹದ ಗುರಿಯನ್ನು ತಲುಪಿ ಸಂಪನ್ಮೂಲ ಕ್ರೋಡೀಕರಣಕ್ಕೆ ಮೊದಲ ಆದ್ಯತೆ ನೀಡಲಾಗುವುದು. ಅನಗತ್ಯ ವೆಚ್ಚಗಳಿಗೆ ಕಡಿವಾಣ ಹಾಕಿ ನಗರದ ಜನರಿಗೆ ಉತ್ತಮ ಸೇವೆ ಒದಗಿಸಲಾಗುವುದು. ಕಸ ಸಮಸ್ಯೆಯಿಂದ ಉದ್ಯಾನನಗರಿಗೆ ಕೆಟ್ಟ ಹೆಸರು ಬಂದಿದೆ. ಘನತ್ಯಾಜ್ಯ ವಿಲೇವಾರಿ ಸಮಸ್ಯೆಯನ್ನು ಬಗೆಹರಿಸಲು ಸಮರೋಪಾದಿಯಲ್ಲಿ ಚಟುವಟಿಕೆ ಹಮ್ಮಿಕೊಳ್ಳಲಾಗುವುದು.
* ಯಾವ ಸಮಸ್ಯೆ ಬಗ್ಗೆ ತುರ್ತು ಕ್ರಮ ಕೈಗೊಳ್ಳುತ್ತೀರಿ?
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದೆ. ಜೊತೆಗೆ ಮುಂಗಾರು ಮಳೆ ಸಂದರ್ಭದಲ್ಲಿ ಅನಾಹುತಗಳು ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಿದೆ. ಈ ಸಂಬಂಧ ಹಿಂದಿನ ಆಯುಕ್ತ ಎಂ. ಲಕ್ಷ್ಮಿನಾರಾಯಣ ಅವರೊಂದಿಗೆ ಸಮಾ
ಲೋಚನೆ ನಡೆಸಿದ್ದೇನೆ. ಈ ಸಮಸ್ಯೆಗಳನ್ನು ಪರಿಹರಿಸಲು ಕೈಗೊಂಡ ಕ್ರಮಗಳ ಬಗ್ಗೆ ಅವರು ಸಮಗ್ರ ಮಾಹಿತಿ ನೀಡಿದ್ದಾರೆ.
*ಬಿಬಿಎಂಪಿಯಲ್ಲಿ ಈಗ ಚುನಾಯಿತ ಪ್ರತಿನಿಧಿಗಳು ಇಲ್ಲ. ಇನ್ನೊಂದೆಡೆ ವಿಭಜನೆ ಪ್ರಕ್ರಿಯೆಯೂ ನಡೆಯುತ್ತಿದೆ. ಇಂತಹ ಪರಿಸ್ಥಿತಿಯನ್ನು ಹೇಗೆ ನಿಭಾಯಿಸುತ್ತೀರಿ?
ಬಿಬಿಎಂಪಿಯಲ್ಲಿ ಪ್ರತಿಯೊಂದು ಕ್ಷಣವೂ ನಿರ್ಣಾಯಕ. ನಗರದ ಜನಜೀವನದ ಬೇರೆ ಬೇರೆ ಹಂತಗಳಲ್ಲಿನ ಸಮಸ್ಯೆಗಳ ಬಗ್ಗೆ ಬಿಬಿಎಂಪಿ ಸ್ಪಂದಿಸುತ್ತಲೇ ಇರಬೇಕಾಗುತ್ತದೆ. ಬಿಬಿಎಂಪಿ ಆಡಳಿತ ಮಂಡಳಿಯನ್ನು ರಾಜ್ಯ ಸರ್ಕಾರ ಈಗಾಗಲೇ ವಿಸರ್ಜಿಸಿದೆ. ಹೀಗಾಗಿ ಬಿಬಿ
ಎಂಪಿಯಲ್ಲಿ ಚುನಾಯಿತ ಪ್ರತಿನಿಧಿಗಳು ಇಲ್ಲ. ಇದು ಕಾಕತಾಳೀಯ. ನನ್ನ ಕರ್ತವ್ಯ ನಿಭಾಯಿಸಲು ಸಜ್ಜಾಗಿದ್ದೇನೆ.