ಬೆಳಗಾವಿ: ‘ಬೆಂಗಳೂರಿನ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಮೂಲ ಸೌಲಭ್ಯಗಳಿಗೆ ಕೊರತೆ ಇಲ್ಲ. ಅಲ್ಲೆಲ್ಲ ಒಳ್ಳೆಯ ಉಪನ್ಯಾಸಕರಿದ್ದಾರೆ. ಅಂತೆಯೇ ಪ್ರತಿಭಾವಂತ ವಿದ್ಯಾರ್ಥಿಗಳು ಬಿ.ಇ. ಓದಲು ಅಲ್ಲಿನ ಕಾಲೇಜುಗಳನ್ನೇ ಆಯ್ಕೆ ಮಾಡಿಕೊಳ್ಳುತ್ತಾರೆ’
ಹೀಗೆ ಹೇಳಿದವರು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಡಾ.ಎಚ್.ಮಹೇಶಪ್ಪ.
ಇದೇ 9ರಂದು ನಡೆಯಲಿರುವ ವಿ.ವಿ. ಘಟಿಕೋತ್ಸವದ ಅಂಗವಾಗಿ ಶನಿವಾರ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ‘ರಾಜ್ಯದಲ್ಲಿ ನೂರಾರು ಎಂಜಿನಿಯರಿಂಗ್ ಕಾಲೇಜುಗಳಿದ್ದರೂ ರ್ಯಾಂಕ್ ಪಟ್ಟಿಯಲ್ಲಿ ಬೆಂಗಳೂರಿನ ಕಾಲೇಜುಗಳ ವಿದ್ಯಾರ್ಥಿಗಳದ್ದೇ ಸಿಂಹಪಾಲು ಇದೆಯಲ್ಲ’ ಎಂಬ ಪ್ರಶ್ನೆಗೆ ಈ ರೀತಿ ಉತ್ತರಿಸಿದರು.
‘ಬೆಂಗಳೂರು ಹೊರತುಪಡಿಸಿ ಬೇರೆಡೆ ಮೂಲ ಸೌಲಭ್ಯಗಳ ಕೊರತೆ ಎದುರಿಸುವ ಕಾಲೇಜುಗಳ ಆಡಳಿತ ಮಂಡಳಿಗಳ ವಿರುದ್ಧ ಕ್ರಮ ಕೈಗೊಳ್ಳುವುದಿಲ್ಲವೇ’ ಎಂಬ ಪ್ರಶ್ನೆಗೆ, ‘ವಿ.ವಿ. ಈ ಕುರಿತು ಗಮನಿಸಿ ಕನಿಷ್ಠ ಸೌಲಭ್ಯ ನೀಡುವಂತೆ ಸೂಚಿಸಿರುತ್ತದೆ. ಆ ಸೂಚನೆಯನ್ನು ಕಾಲೇಜುಗಳ ಪಾಲಿಸುತ್ತವೆ. ಪಿಯುಸಿಯಲ್ಲಿ ಶೇ 90ಕ್ಕಿಂತ ಅಧಿಕ ಅಂಕ ಗಳಿಸಿದ ಹಾಗೂ ಸಿಇಟಿಯಲ್ಲಿ ಅಧಿಕ ರ್ಯಾಂಕ್ ಪಡೆದ ವಿದ್ಯಾರ್ಥಿಗಳು ಸೌಲಭ್ಯ ಹಾಗೂ ಒಳ್ಳೆಯ ಉಪನ್ಯಾಸಕರಿರುವ ಕಾಲೇಜುಗಳನ್ನು ಆಯ್ದುಕೊಳ್ಳುತ್ತಾರೆ ಎಂದರು.