ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ‘ಹೊಸ ಭೂ ಸ್ವಾಧೀನ ಕಾಯ್ದೆ’ಗೆ ಸಂಬಂಧಿಸಿದ ನಿಯಮಗಳನ್ನು ರಾಜ್ಯ ಸರ್ಕಾರ ಶೀಘ್ರದಲ್ಲಿ ಅಂತಿಮಗೊಳಿಸಲಿದೆ ಎಂದು ಕಂದಾಯ ಸಚಿವ ವಿ. ಶ್ರೀನಿವಾಸ ಪ್ರಸಾದ್ ಶುಕ್ರವಾರ ಹೇಳಿದರು.
ಹೊಸ ಭೂ ಸ್ವಾಧೀನ ಕಾಯ್ದೆಗೆ ಸಂಬಂಧಿಸಿದಂತೆ ವಿವಿಧ ರಾಜ್ಯಗಳ ಅಭಿಪ್ರಾಯ ಪಡೆಯಲು ಗ್ರಾಮೀಣಾಭಿವೃದ್ಧಿ ಸಚಿವ ನಿತಿನ್ ಗಡ್ಕರಿ ಅವರು ಕರೆದಿದ್ದ ಸಭೆಯಲ್ಲಿ ಭಾಗವಹಿಸಿದ್ದ ಶ್ರೀನಿವಾಸ ಪ್ರಸಾದ್ ಪತ್ರಕರ್ತರ ಜತೆ ಮಾತನಾಡಿದರು.
ರಾಜ್ಯ ಸರ್ಕಾರ ಜೂನ್ 21ರಂದು ಕರಡು ನಿಯಮಾವಳಿ ಸಿದ್ಧಪಡಿಸಿ ಸಾರ್ವಜನಿಕ ಚರ್ಚೆಗೆ ಬಿಡುಗಡೆ ಮಾಡಿದೆ. ಜನರಿಂದ ಬಂದ ಅಭಿಪ್ರಾಯಗಳನ್ನು ಪರಿಶೀಲಿಸಿದ ಬಳಿಕ ನಿಯಮಾವಳಿಗಳನ್ನು ಅಂತಿಮಗೊಳಿಸಿ ಅಧಿಕೃತವಾಗಿ ಪ್ರಕಟಿಸಲಾಗುವುದು ಎಂದರು.
ಭೂ ಸ್ವಾಧೀನ ಕಾಯ್ದೆಗೆ ಸಂಬಂಧಿಸಿದ ನಿಯಾಮವಳಿಗಳು ಈ ವರ್ಷದ ಜನವರಿ ಒಂದರಿಂದ ಅನ್ವಯವಾಗುವಂತೆ ಜಾರಿಗೆ ಬರಲಿದೆ. ಸಾರ್ವಜನಿಕ ಹಾಗೂ ಖಾಸಗಿ ಉದ್ದೇಶಗಳಿಗೆ ಜಮೀನು ಸ್ವಾಧೀನ ಮಾಡಿಕೊಳ್ಳುವ ಪ್ರಕ್ರಿಯೆ ಪಾರದರ್ಶಕವಾಗಿ ನಡೆಯಲಿದೆ. ರೈತರಿಗೆ ನ್ಯಾಯಸಮ್ಮತ ಪರಿಹಾರ ದೊರೆಯಲಿದೆ ಎಂದು ಅವರು ತಿಳಿಸಿದರು.
ಹೊಸ ಕಾಯ್ದೆಗೆ ಅನುಗುಣವಾಗಿ ರಾಜ್ಯದ ಬಿಡಿಎ, ಕೆಎಚ್ಬಿ ಹಾಗೂ ಕೆಐಎಡಿಬಿ ಕಾಯ್ದೆಗಳನ್ನು ಮಾರ್ಪಾಡು ಮಾಡಲಾಗುವುದು. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಭೂ ಸ್ವಾಧೀನ ಕಾಯ್ದೆ ರೈತರಿಗೆ ಪರಿಹಾರ, ಪುನರ್ವಸತಿ ಒದಗಿಸುವ ನಿಟ್ಟಿನಲ್ಲಿ ಅತ್ಯುತ್ತಮವಾಗಿದೆ. ಆದರೆ, ರೈಲ್ವೆ ಹಾಗೂ ಹೆದ್ದಾರಿ ನಿರ್ಮಾಣದಂಥ ಸಾರ್ವಜನಿಕ ಉದ್ದೇಶಗಳಿಗೆ ಭೂಮಿ ವಶಪಡಿಸಿಕೊಳ್ಳಲು ರೈತರ ಅನುಮತಿ ಪಡೆಯಬೇಕೆಂಬ ನಿಬಂಧನೆಗಳನ್ನು ಬದಲಾವಣೆ ಮಾಡ ಬೇಕೆಂದು ರಾಜ್ಯ ಸರ್ಕಾರ ಸಲಹೆ ಮಾಡಿರುವುದಾಗಿ ವಿವರಿಸಿದರು.
ಐದು ನೂರು ಎಕರೆವರೆಗೆ ಜಮೀನು ಸ್ವಾಧೀನ ಮಾಡಿಕೊಂಡ ಸಂದರ್ಭದಲ್ಲಿ ಪುನರ್ವಸತಿ ಯೋಜನೆ ಕಡ್ಡಾಯ ಮಾಡಬಾರದು. ಇದಕ್ಕಿಂತ ಹೆಚ್ಚಿನ ಭೂಮಿ ಸ್ವಾಧೀನ ಮಾಡಿಕೊಂಡ ಸಂದರ್ಭದಲ್ಲಿ ಇದನ್ನು ಅನ್ವಯಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಜಮೀನು ಸ್ವಾಧೀನ ಸಂದರ್ಭಗಳಲ್ಲಿ ಸಾಮಾಜಿಕ ಪರಿಣಾಮ ಕುರಿತು ನಡೆಯುವ ವಿಶ್ಲೇಷಣೆಗೆ ನಿಗದಿಪಡಿಸಿರುವ ಸಮಯವನ್ನು ತಗ್ಗಿಸಬೇಕು ಎಂದು ರಾಜ್ಯ ಸರ್ಕಾರ ಒತ್ತಾಯ ಮಾಡಿದೆ ಎಂದು ಶ್ರೀನಿವಾಸ ಪ್ರಸಾದ್ ನುಡಿದರು.
ಸ್ವಾಧೀನ ಮಾಡಿಕೊಂಡ ಜಮೀನನ್ನು ನಿಗದಿತ ಅವಧಿಯೊಳಗೆ ನಿರ್ದಿಷ್ಟ ಉದ್ದೇಶಕ್ಕೆ ಬಳಸದಿದ್ದರೆ ಅಂಥ ಭೂಮಿಯನ್ನು ಸರ್ಕಾರದ ಭೂ ಬ್ಯಾಂಕ್ಗೆ ಹಿಂತಿರುಗಿಸಲು ಅವಕಾಶ ಇರಬೇಕು. ಮೂಲ ಮಾಲೀಕರಿಗೆ ವಾಪಸ್ ಮಾಡಬಾರದು ಎನ್ನುವುದು ರಾಜ್ಯ ಸರ್ಕಾರದ ನಿಲುವಾಗಿದೆ ಎಂದು ಕಂದಾಯ ಸಚಿವರು ಸ್ಪಷ್ಟಪಡಿಸಿದರು.
ಭೂ ಸ್ವಾಧೀನ ಕಾಯ್ದೆಯಲ್ಲಿರುವ ಕೆಲವು ನಿರ್ಬಂಧಗಳನ್ನು ಸಡಿಲಗೊಳಿಸಬೇಕು ಎಂದು ಕರ್ನಾಟಕ, ರಾಜಸ್ತಾನ ಸೇರಿದಂತೆ ಹಲವು ರಾಜ್ಯಗಳು ಕೇಂದ್ರ ಸರ್ಕಾರಕ್ಕೆ ಸಲಹೆ ಮಾಡಿವೆ. ನಮ್ಮ ಸಲಹೆಗಳನ್ನು ಕೇಳಿರುವ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದೆ ಎಂದು ಸಚಿವ ಶ್ರೀನಿವಾಸ ಪ್ರಸಾದ್ ನುಡಿದರು.
ಹಿಂದಿನ ಸರ್ಕಾರ ಜಾರಿಗೆ ತಂದಿರುವ ಭೂ ಸ್ವಾಧೀನ ಕಾಯ್ದೆ ಕುರಿತು ಬಹುತೇಕ ಎಲ್ಲ ರಾಜ್ಯಗಳು ಮೆಚ್ಚುಗೆ ವ್ಯಕ್ತಪಡಿಸಿವೆ ಎಂದು ಕಂದಾಯ ಸಚಿವರು ಬಣ್ಣಿಸಿದರು. ಕರ್ನಾಟಕ ಭೂ ದಾಖಲೆಗಳನ್ನು ಕಂಪ್ಯೂಟರೀಕರಣ ಮಾಡಿರುವ ಬಗ್ಗೆ ಕೇಂದ್ರ ಸರ್ಕಾರ ಮೆಚ್ಚುಗೆ ವ್ಯಕ್ತಪಡಿಸಿತು. ಗುಜರಾತ್, ಮಹಾರಾಷ್ಟ್ರ ಹಾಗೂ ತ್ರಿಪುರಾ ಭೂ ದಾಖಲೆಗಳನ್ನು ಕಂಪ್ಯೂಟರೀಕರಣಗೊಳಿಸಿರುವ ಇತರ ರಾಜ್ಯಗಳು ಎಂದು ಪ್ರಸಾದ್
ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.