ಬೆಂಗಳೂರು: ‘ಶಾಲೆಗಳನ್ನು ನಿರ್ಮಿಸಿದರೆ ಸಾಲದು. ಹೆಣ್ಣು ಮಕ್ಕಳ ಸುರಕ್ಷತೆಗೆ ಹೆಚ್ಚು ಒತ್ತು ಕೊಡಬೇಕಾಗಿರುವುದು ಶಾಲೆಗಳ ಆಡಳಿತ ಮಂಡಳಿಯ ಕರ್ತವ್ಯ’ ಎಂದು ಲೋಕಸತ್ತಾ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಮುಕುಂದ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಹಣ ಮಾಡುವ ಉದ್ದೇಶದಿಂದ ಖಾಸಗಿ ಶಾಲೆಗಳು ಅಣಬೆಯಂತೆ ಬೆಳೆಯುತ್ತಿದೆ. ಖಾಸಗಿ ಶಾಲೆಗಳು ಹಣದ ಬಗ್ಗೆ ಹೆಚ್ಚು ಗಮನ ಹರಿಸುತ್ತವೆಯೇ ಹೊರತು, ಹೆಣ್ಣು ಮಕ್ಕಳ ಸುರಕ್ಷತೆ ಬಗ್ಗೆ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
‘ಮಹಿಳೆಯರ ಮೇಲೆ ಹೆಚ್ಚುತ್ತಿರುವ ಲೈಂಗಿಕ ದೌರ್ಜನ್ಯ, ಅತ್ಯಾಚಾರದಂತಹ ಕೃತ್ಯಗಳನ್ನು ನಿಯಂತ್ರಿಸಲು ಪೊಲೀಸ್ ವ್ಯವಸ್ಥೆ ಸಂಪೂರ್ಣವಾಗಿ ವಿಫಲವಾಗಿದೆ. ಹೀಗಾಗಿ ಅಪಾಯಕಾರಿ ಸಾರ್ವಜನಿಕ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಬೇಕು. ಆನ್ಲೈನ್ ಮೂಲಕ ದೂರು ದಾಖಲಿಸುವ ವ್ಯವಸ್ಥೆ ಜಾರಿ ತರಬೇಕು’ ಎಂದು ಒತ್ತಾಯಿಸಿದರು.
‘ನಗರದಲ್ಲಿ ಮಹಿಳಾ ಪೊಲೀಸ್ ಠಾಣೆಗಳು ಹೆಚ್ಚಾಗಬೇಕು. ಪೊಲೀಸ್ ಅಧಿಕಾರಿಗಳಿಗೆ ಕಾನೂನಿನ ಬಗ್ಗೆ ತಿಳಿವಳಿಕೆ ಮೂಡಿಸಲು ಕಾರ್ಯಾಗಾರ ಹಮ್ಮಿಕೊಳ್ಳಬೇಕು ಎಂದು ಆಗ್ರಹಿಸಿದರು.
ಶಾಲಾ ಬಸ್ ಚಾಲಕರು, ಆಯಾಗಳಿಗೆ ಜಾಗೃತಿ ಕಾರ್ಯಕ್ರಮ
ಶಾಲಾ ಕಾಲೇಜುಗಳ ವಿದ್ಯಾರ್ಥಿಗಳ ಮೇಲಿನ ಲೈಂಗಿಕ ದೌರ್ಜನ್ಯದ ವಿರುದ್ಧ ಜಾಗೃತಿ ಮೂಡಿಸಲು ನಗರದ ಗಿರಿನಗರ ದಲ್ಲಿರುವ ಪೊಲೀಸ್ ಇಲಾಖೆಯ ಸಹಯೋಗದಲ್ಲಿ ‘ಸ್ಯಾಮ್ ಟೂರ್ಸ್ ಅಂಡ್ ಟ್ರಾವೆಲ್ಸ್’ ಶಾಲಾ ಬಸ್್ ಚಾಲಕರು ಮತ್ತು ಆಯಾಗಳಿಗೆ ಜಾಗೃತಿ ಸಭೆ ನಡೆಸಿತು.