ಬೆಂಗಳೂರು: ‘ಇತ್ತೀಚಿನ ವರ್ಷಗಳಲ್ಲಿ ಮೀಸಲು ಕ್ಷೇತ್ರಗಳಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಗಳು, ಮೇಲ್ವರ್ಗದ ಸೇವಕರು ಆಯ್ಕೆಯಾಗುತ್ತಿದ್ದಾರೆ. ಇದು ಅಪಾಯಕಾರಿ ಬೆಳವಣಿಗೆ’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಲ್.ಹನುಮಂತಯ್ಯ ಕಳವಳ ವ್ಯಕ್ತಪಡಿಸಿದರು.
‘ಅಕ್ಷಯ ಫೌಂಡೇಶನ್’ ಆಶ್ರಯದಲ್ಲಿ ನಗರದ ನಯನ ಸಭಾಂಗಣದಲ್ಲಿ ಮಂಗಳವಾರ ನಡೆದ ‘ಪ್ರಸಕ್ತ ರಾಜಕಾರಣದಲ್ಲಿ ದಲಿತರ ಸ್ಥಿತಿಗತಿ’ ಕುರಿತ ವಿಚಾರಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.
‘ಈ ಹಿಂದೆ ಮೀಸಲು ಕ್ಷೇತ್ರಗಳಲ್ಲಿ ಹಿಂದುಳಿದವರ ಬಗ್ಗೆ ನೈಜ ಕಾಳಜಿ ಹೊಂದಿರುವವರು ಆಯ್ಕೆಯಾಗುತ್ತಿದ್ದರು. ಇಂದು ಇದಕ್ಕೆ ತದ್ವಿರುದ್ಧ ಸ್ಥಿತಿ ಇದೆ. ಈ ಕಾರಣದಿಂದ ಸಂಘಟನೆಗಳು ದಲಿತರಲ್ಲಿ ರಾಜಕೀಯ ಜಾಗೃತಿ ಮೂಡಿಸಬೇಕು’ ಎಂದು ಅವರು ಸಲಹೆ ನೀಡಿದರು.
‘ಇತ್ತೀಚಿನ ದಿನಗಳಲ್ಲಿ ದಲಿತ ಸಂಘಟನೆಗಳು ಹೋರಾಟ ಕೈಬಿಟ್ಟು ತಟಸ್ಥ ಧೋರಣೆ ತಳೆದಿವೆ. ಇದರಿಂದಾಗಿ ದಲಿತರ ಸಮಸ್ಯೆಗಳೆಲ್ಲ ಪರಿಹಾರ ಆಗಿವೆಯೇ ಎಂಬ ಅನುಮಾನ ಮೂಡುತ್ತದೆ. ಆದರೆ, ದಲಿತರ ಸಮಸ್ಯೆ ಹೆಚ್ಚಿದೆ’ ಎಂದರು.
‘ರಾಜಕಾರಣದಲ್ಲಿ ದಲಿತರು ಗಳಿಸಿದ್ದಕ್ಕಿಂತ ಕಳೆದುಕೊಂಡದ್ದೇ ಹೆಚ್ಚು. ಅವರಿಗೆ ಸಿಗಬೇಕಾದ ಸ್ಥಾನಮಾನ ಸರಿಯಾಗಿ ಸಿಕ್ಕಿಲ್ಲ’ ಎಂದು ಪತ್ರಕರ್ತ ಇಂದೂಧರ ಹೊನ್ನಾಪುರ ಅವರು ಬೇಸರ ವ್ಯಕ್ತಪಡಿಸಿದರು.
ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್, ಎಸ್ಸಿ/ಎಸ್ಟಿ ಉದ್ದಿಮೆದಾರರ ಸಂಘದ ಕಾರ್ಯಾಧ್ಯಕ್ಷ ಸಿ.ಜಿ.ಶ್ರೀನಿವಾಸನ್, ಜಾನಪದ ಅಕಾಡೆಮಿಯ ಅಧ್ಯಕ್ಷ ಪಿಚ್ಚಳ್ಳಿ ಶ್ರೀನಿವಾಸ್, ಕವಿ ವಡ್ಡಗೆರೆ ನಾಗರಾಜಯ್ಯ, ಅಕ್ಷಯ ಪ್ರತಿಷ್ಠಾನದ ಅಧ್ಯಕ್ಷ ಎನ್.ಕೃಷ್ಣಮೂರ್ತಿ ಮತ್ತಿತರರು ಇದ್ದರು.