ಬೆಂಗಳೂರು: ‘ವನಸಿರಿಯ ಬೆಳವಣಿಗೆ ಹಾಗೂ ಸಂರಕ್ಷಣೆಗೆ ರಾಜ್ಯ ಸರ್ಕಾರ ಹೆಚ್ಚಿನ ಒತ್ತು ನೀಡಬೇಕು’ ಎಂದು ‘ಸಾಲುಮರ’ದ ತಿಮ್ಮಕ್ಕ ಒತ್ತಾಯಿಸಿದರು.
ಭಾರತೀಯ ಸಮಾಜ ಸೇವಾ ಟ್ರಸ್ಟ್ ಮತ್ತು ಅಖಿಲ ಕರ್ನಾಟಕ ಮಕ್ಕಳ ಕೂಟದ ಆಶ್ರಯದಲ್ಲಿ ಅಖಿಲ ಕರ್ನಾಟಕ ಮಕ್ಕಳ ಕೂಟದ ಸಭಾಂಗಣ ದಲ್ಲಿ ಮಂಗಳವಾರ ನಡೆದ ವಿಶ್ವ ಭೂಮಿ ದಿನಾಚರಣೆ ಹಾಗೂ ‘ಜೀವನ ರಕ್ಷಿಸಲು ಭೂಮಿಯನ್ನು ಸಂರಕ್ಷಿಸಿ’ ಕುರಿತ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು. ‘ನಿಸರ್ಗ ಚೆನ್ನಾಗಿದ್ದರೆ ಮಾತ್ರ ಮನುಷ್ಯರು ನೆಮ್ಮದಿಯಿಂದ ಬಾಳಲು ಸಾಧ್ಯ. ಈಚಿನ ವರ್ಷಗಳಲ್ಲಿ ಮರಗಳ ಸಂಖ್ಯೆಯಲ್ಲಿ ತೀವ್ರ ಕಡಿಮೆ ಯಾಗು ತ್ತಿದೆ. ಮರಗಳ ಸಂರಕ್ಷಣೆಗೆ ಸರ್ಕಾರ ಹೆಚ್ಚಿನ ಒತ್ತು ನೀಡುತ್ತಿಲ್ಲ’ ಎಂದು ಅವರು ಬೇಸರ ವ್ಯಕ್ತಪಡಿಸಿದರು.
ಅಧ್ಯಕ್ಷತೆ ವಹಿಸಿದ್ದ ಪರಿಸರವಾದಿ ಶಿವಮಲ್ಲು, ‘ಪರಿಸರ ಸಂರಕ್ಷಣೆಯ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸುವ ಅಗತ್ಯ ಇದೆ. ಹೀಗಾಗಿ ಇಲ್ಲಿ ಮಕ್ಕಳಿಗೆ ವಿವಿಧ ಸ್ಪರ್ಧೆ ಆಯೋಜಿಸಲಾಗಿದೆ’ ಎಂದು ತಿಳಿಸಿದರು. ಅಖಿಲ ಕರ್ನಾಟಕ ಮಕ್ಕಳ ಕೂಟ ಅಧ್ಯಕ್ಷ ಟಿ.ವಿ.ಮಾರುತಿ ಅವರು ವಿದ್ಯಾರ್ಥಿ ಪರಿಸರ ಪ್ರಶಸ್ತಿ ಪ್ರದಾನ ಮಾಡಿದರು.
ಮಳೆ ನೀರು ಸಂರಕ್ಷಣ ತಜ್ಞ ಪ್ರೊ. ಕೆ. ಪಾಂಡುರಂಗಯ್ಯ, ಬೆಂಗಳೂರು ದಕ್ಷಿಣ ಇನ್ನರ್ವೀಲ್ ಕ್ಲಬ್ ಅಧ್ಯಕ್ಷ ವತ್ಸಲ ಪ್ರಸಾದ್, ಕಲಾವಿದರ ಕಲ್ಯಾಣ ವೇದಿಕೆಯ ಅಧ್ಯಕ್ಷ ಕೆಂಚನೂರು ಶಂಕರ್ ಮತ್ತಿತರರು ಉಪಸ್ಥಿತರಿದ್ದರು. ಇದೇ ಸಂದರ್ಭ ಏರ್ಪಡಿಸಿದ್ದ ಚಿತ್ರಕಲಾ ಸ್ಪರ್ಧೆಯಲ್ಲಿ 380 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.