ಬೆಂಗಳೂರು: ‘ಬಿಬಿಎಂಪಿ ಚುನಾವಣೆ ಮುಂದೂಡುವಂತೆ ಕೋರಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಿರುವುದು ಸರಿಯಲ್ಲ’ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ಅಭಿಪ್ರಾಯಪಟ್ಟರು.
ಮಂಗಳವಾರ ನಗರದಲ್ಲಿ ಆಯೋಜಿಸಿದ್ದ ಕೆ.ವಿ. ಶಂಕರಗೌಡ ಅವರ ಸಂಸ್ಮರಣಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಕ್ಕೂ ಮುನ್ನ ಈ ಇಬ್ಬರೂ ನಾಯಕರು ಪ್ರತ್ಯೇಕವಾಗಿ ಸುದ್ದಿಗಾರರೊಂದಿಗೆ ಮಾತನಾಡಿದರು.
‘ಬಿಬಿಎಂಪಿ ಚುನಾವಣೆಗೆ ಈಗಾಗಲೇ ವೇಳಾಪಟ್ಟಿ ಘೋಷಣೆ ಆಗಿರುವುದರಿಂದ ಚುನಾವಣೆ ನಡೆಯುತ್ತದೆ’ ಎಂದು ದೇವೇಗೌಡ ಅಭಿಪ್ರಾಯಪಟ್ಟರು.
‘ಚುನಾವಣೆ ಮುಂದೂಡಲು ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಿರುವುದು ಸರಿಯಲ್ಲ’ ಎಂದು ಕೃಷ್ಣ ಅವರು ಹೇಳಿದರು.
ರೈತರು ಭಾವಾವೇಶಕ್ಕೆ ಒಳಗಾಗದಿರಿ: ‘ಸಂಕಷ್ಟದ ಪರಿಸ್ಥಿತಿಯಲ್ಲಿ ರೈತರು ಭಾವಾವೇಶಕ್ಕೆ ಒಳಗಾಗಿ ಜೀವ ತ್ಯಜಿಸುವಂತಹ ತಪ್ಪು ತೀರ್ಮಾನ ಕೈಗೊಳ್ಳಬಾರದು. ಆತ್ಮಸ್ಥೈರ್ಯದಿಂದ ಇರಬೇಕು’ ಎಂದು ದೇವೇಗೌಡ ಮನವಿ ಮಾಡಿದರು.
‘ರೈತರ ಆತ್ಮಹತ್ಯೆ ದುರದೃಷ್ಟಕರ, ಅಹಿತಕರ’ ಎಂದು ಕೃಷ್ಣ ಪ್ರತಿಕ್ರಿಯಿಸಿದರು.