ನವದೆಹಲಿ (ಪಿಟಿಐ): ವಿದೇಶಿ ದೇಣಿಗೆ ಕಾನೂನು ಉಲ್ಲಂಘಿಸಿರುವ ಆರೋಪ ಎದುರಿಸುತ್ತಿರುವ ಬಿಜೆಪಿ, ಈ ಸಂಬಂಧ ದೆಹಲಿ ಹೈಕೋರ್ಟ್ ನೀಡಿರುವ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದೆ.
ಬಿಜೆಪಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡಿರುವ ಸುಪ್ರೀಂಕೋರ್ಟ್, ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗಗಳಿಗೆ ನೋಟಿಸ್ ನೀಡಿದೆ.
ವಿವರ: ಬ್ರಿಟನ್ ಮೂಲದ ವೇದಾಂತ ಕಂಪೆನಿಯ ಸಹ ಸಂಸ್ಥೆಗಳಿಂದ ದೇಣಿಗೆ ಸ್ವೀಕರಿಸಿದ್ದರಿಂದಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ವಿದೇಶಿ ದೇಣಿಗೆ ಕಾಯ್ದೆ ಉಲ್ಲಂಘಿಸಿರುವ ಆರೋಪ ಎದುರಿಸುತ್ತಿವೆ. ಈ ಪ್ರಕರಣದಲ್ಲಿ ತೀರ್ಪು ನೀಡಿದ್ದ ದೆಹಲಿ ಹೈಕೋರ್ಟ್ ಬಿಜೆಪಿ
ಹಾಗೂ ಕಾಂಗ್ರೆಸ್ ಪಕ್ಷಗಳು ಕಾಯ್ದೆ ಉಲ್ಲಂಘಿಸಿರುವುದು ಮೇಲ್ನೋಟಕ್ಕೆ ಸಾಬೀತಾಗುತ್ತಿದೆ ಎಂದು ಅಭಿಪ್ರಾಯ ಪಟ್ಟಿತ್ತು.
ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿರುವ ಬಿಜೆಪಿ, ವೇದಾಂತ ಕಂಪೆನಿಯಲ್ಲಿ ಅನಿಲ್ ಅಗರವಾಲ್ ಹಾಗೂ ಕುಟುಂಬದವರು ಶೇ 50ಕ್ಕಿಂತ ಹೆಚ್ಚು ಷೇರುಗಳನ್ನು ಹೊಂದಿದ್ದಾರೆ. ಹಾಗಾಗಿ, ಅವರು ನೀಡಿರುವ ದೇಣಿಗೆಯನ್ನು ವಿದೇಶಿ ದೇಣಿಗೆ ಎಂದು ಪರಿಗಣಿಸಲಾಗದು ಎಂದು ಹೇಳಿದೆ.
ಬಿಜೆಪಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಚ್. ಎಲ್. ದತ್ತು ಅವರಿದ್ದ ಪೀಠ, ಕಾಂಗ್ರೆಸ್ ಸಲ್ಲಿಸಿರುವ ಅರ್ಜಿಯ ಜತೆಗೇ ಈ ಅರ್ಜಿಯ ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿತು.