ಬೆಂಗಳೂರು: ‘ನಗರ ವ್ಯಾಪ್ತಿಯಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಪ್ರಕರಣಗಳಲ್ಲಿ ಸಂಬಂಧಿಸಿದ ಎಂಜಿನಿಯರ್ಗಳನ್ನೇ ಹೊಣೆಗಾರರನ್ನಾಗಿ ಮಾಡಬೇಕು ಹಾಗೂ ಇದು ಅವರ ಕರ್ತವ್ಯ ಲೋಪ ಎಂದೇ ಪರಿಗಣಿಸಬೇಕು’ ಎಂದು ಹೈಕೋರ್ಟ್ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ತಾಕೀತು ಮಾಡಿದೆ.
ಈ ಸಂಬಂಧ 2013ರ ಜುಲೈ 23ರಂದು ನೀಡಲಾಗಿರುವ ಹೈಕೋರ್ಟ್ ನಿರ್ದೇಶನಗಳನ್ನು ಪಾಲಿಸುವಂತೆ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ಹಾಗೂ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರಿದ್ದ ವಿಭಾಗೀಯ ಪೀಠವು ನಗರಾಭಿವೃದ್ಧಿ ಇಲಾಖೆ ಹಾಗೂ ಬಿಬಿಎಂಪಿಗೆ ಸೂಚಿಸಿದೆ.
ಇಂತಹ ಸಮಸ್ಯೆಗಳನ್ನು ಬಗೆಹರಿಸಲು ರಾಜ್ಯ ಸರ್ಕಾರ ಶಾಶ್ವತ ಪರಿಹಾರ ಮಾರ್ಗೋಪಾಯಗಳನ್ನು ಕಂಡುಕೊಳ್ಳುವಂತೆಯೂ ಪೀಠವು ಇದೇ ವೇಳೆ ತಿಳಿಸಿದೆ.
ಈ ಸಂಬಂಧ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ವೇಳೆ ಈ ನಿರ್ದೇಶನ ನೀಡಿದ ಪೀಠವು ನಿರ್ದೇಶನ ಪಾಲನೆಗೆ ಎರಡು ತಿಂಗಳ ಕಾಲಾವಕಾಶ ನೀಡಿತು.