ಬೆಂಗಳೂರು: ನಗರದಲ್ಲಿರುವ ಅನಧಿಕೃತ ಜಾಹೀರಾತು ಫಲಕಗಳನ್ನು ತೆರವುಗೊಳಿಸುವ ಸಂಬಂಧ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮತ್ತು ಬೆಂಗಳೂರು ವಿದ್ಯುತ್ ಸರಬರಾಜು ಕಂಪೆನಿ (ಬೆಸ್ಕಾಂ) ಅಧಿಕಾರಿಗಳು ಮಂಗಳವಾರ ಸಮನ್ವಯ ಸಭೆ ನಡೆಸಿದರು.
ಬಿಬಿಎಂಪಿ ಆಯುಕ್ತ ಎಂ.ಲಕ್ಷ್ಮೀನಾರಾಯಣ ಹಾಗೂ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಪಂಕಜಕುಮಾರ್ ಪಾಂಡೆ ಅವರ ನೇತೃತ್ವದಲ್ಲಿ ಎರಡೂ ಸಂಸ್ಥೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. ‘ನಗರದಲ್ಲಿ 1,729 ಜಾಹೀರಾತು ಫಲಕಗಳಿದ್ದು, ಅದರಲ್ಲಿ 1,017 ಅನಧಿಕೃತವಾಗಿವೆ’ ಎಂದು ಬಿಬಿಎಂಪಿ ಅಧಿಕಾರಿಗಳು ಸಭೆ ಗಮನಕ್ಕೆ ತಂದರು. ‘ಬೆಸ್ಕಾಂ ಈಗಾಗಲೇ 279 ಅನಧಿಕೃತ ಜಾಹೀರಾತು ಫಲಕಗಳಿಗೆ ನೀಡಲಾಗಿದ್ದ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದೆ’ ಎಂದು ಪಾಂಡೆ ವಿವರಿಸಿದರು.
ಉಳಿದಿರುವ ಎಲ್ಲ ಅನಧಿಕೃತ ಜಾಹೀರಾತು ಫಲಕಗಳಿಗೆ ನೀಡಲಾಗಿರುವ ವಿದ್ಯುತ್ ಸಂಪರ್ಕವನ್ನು ಇನ್ನು 15 ದಿನಗಳಲ್ಲಿ ಕಡಿತಗೊಳಿಸಬೇಕು. ಅದಕ್ಕೆ ವಾರ್ಡ್ವಾರು ಬೆಸ್ಕಾಂ ಅಧಿಕಾರಿಗಳ ಪಟ್ಟಿಯನ್ನು ಬಿಬಿಎಂಪಿಗೆ ಹಸ್ತಾಂತರಿಸಬೇಕು. ಬೆಸ್ಕಾಂ ಹಾಗೂ ಬಿಬಿಎಂಪಿ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಬೇಕು ಎಂದು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು.
ಬಿಬಿಎಂಪಿಗೆ ಪರವಾನಗಿ ನವೀಕರಣಕ್ಕಾಗಿ ಒಟ್ಟು 1,729 ಅರ್ಜಿಗಳು ಬಂದಿದ್ದು, ಅವುಗಳನ್ನು ಆದ್ಯತೆ ಮೇರೆಗೆ ಪರಿಶೀಲಿಸಿ ಅರ್ಜಿಗಳನ್ನು ವಿಲೇವಾರಿ ಮಾಡಬೇಕು ಎಂದೂ ನಿರ್ಧರಿಸಲಾಯಿತು.