ಬೆಳಗಾವಿ: ಸೇವೆ ಕಾಯಮಾತಿಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದ ಸುಮಾರು 150 ಮಂದಿ ಗ್ರಾಮ ವಿದ್ಯುತ್ ಪ್ರತಿನಿಧಿಗಳನ್ನು ಪೊಲೀಸರು ಶುಕ್ರವಾರ ತಡರಾತ್ರಿ ಬಂಧಿಸಿ ಧಾರವಾಡಕ್ಕೆ ರವಾನಿಸಿದರು.
ಡಿಸಿಪಿ ಅನುಪಮ್ ಅಗ್ರವಾಲ್ ಅವರು ಈ ವಿಷಯ ತಿಳಿಸಿದ್ದು ಗ್ರಾಮ ವಿದ್ಯುತ್ ಪ್ರತಿನಿಧಿಗಳಿಗೆ ಗುರುವಾರ ಒಂದು ದಿನ ಮಾತ್ರ ಪ್ರತಿಭಟನೆ ನಡೆಸಲು ಅನುಮತಿ ನೀಡಲಾಗಿತ್ತು. ಆದರೆ ಅದನ್ನು ಉಲ್ಲಂಘಿಸಿದ ಪ್ರತಿಭಟನ ಕಾರರು ಶುಕ್ರವಾರವೂ ಪ್ರತಿಭಟನೆ ಮುಂದುವರಿಸಿದ್ದ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ ಎಂದರು.
ರಾಜ್ಯದ ವಿವಿಧೆಡೆಯಿಂದ ಬಂದಿದ್ದ ಒಂದು ಸಾವಿರಕ್ಕೂ ಹೆಚ್ಚು ಗ್ರಾಮ ವಿದ್ಯುತ್ ಪ್ರತಿನಿಧಿಗಳು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಶುಕ್ರವಾರವು ಹಲವು ಗ್ರಾಮ ವಿದ್ಯುತ್ ಪ್ರತಿನಿಧಿಗಳು ಅರೆಬೆತ್ತಲೆ ಪ್ರತಿಭಟನೆ ನಡೆಸಿದರು.
ರಾಜಕೀಯ ನಿರ್ಣಯ ತೆಗೆದುಕೊಳ್ಳಿ: ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ ಶೆಟ್ಟರ್ ಸ್ಥಳಕ್ಕೆ ಬಂದು ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು. ರಾಜ್ಯ ಗ್ರಾಮ ವಿದ್ಯುತ್ ಪ್ರತಿನಿಧಿಗಳ ಒಕ್ಕೂಟದ ಅಧ್ಯಕ್ಷ ಎಸ್.ಆರ್. ಶರಣಪ್ಪ ಬೇಡಿಕೆಗಳ ಕುರಿತು ವಿವರ ನೀಡಿದರು.
‘ನಾನು ಮುಖ್ಯಮಂತ್ರಿಯಾಗಿದ್ದಾಗ 24 ಸಾವಿರ ದಿನಗೂಲಿ ಕಾರ್ಮಿಕರನ್ನು ಕಾಯಂಗೊಳಿಸುವ ಮಸೂದೆಯನ್ನು ವಿಧಾನಮಂಡಲದಲ್ಲಿ ಮಂಡಿಸಿ ಅನುಮೋದನೆ ಪಡೆದಿದ್ದರೆ. ಅದರಂತೆ ಇಂದು ದಿನಗೂಲಿ ಕಾರ್ಮಿಕರಿಗೆ ಸರ್ಕಾರಿ ನೌಕರರಂತೆ ಸೌಲಭ್ಯ ಸಿಗುತ್ತಿದೆ. ಗ್ರಾಮ ವಿದ್ಯುತ್ ಪ್ರತಿನಿಧಿಗಳ ಸೇವೆ ಕಾಯಂ ಗೊಳಿಸುವ ಕುರಿತ ಪಂಕಜಕುಮಾರ ಪಾಂಡೆ ವರದಿಯನ್ನು ಕೂಡಲೇ ಬಹಿರಂಗಗೊಳಿಸಬೇಕು. ರಾಜ್ಯ ಸರ್ಕಾರವು ಗ್ರಾಮ ವಿದ್ಯುತ್ ಪ್ರತಿನಿಧಿಗಳ ಸೇವೆ ಕಾಯಂಗೊಳಿಸುವ ಬಗ್ಗೆ ಸಚಿವ ಸಂಪುಟದಲ್ಲಿ ನಿರ್ಣಯ ಕೈಗೊಳ್ಳಬೇಕು. ಇದಕ್ಕೆ ಹಣಕಾಸು ಇಲಾಖೆಯಿಂದ ಅನುಮೋದನೆ ಪಡೆದುಕೊಳ್ಳಬೇಕು’ ಎಂದು ಜಗದೀಶ ಶೆಟ್ಟರ್ ಒತ್ತಾಯಿಸಿದರು.
‘ವಿವಿಧ ಇಲಾಖೆಗಳಲ್ಲಿ 5ರಿಂದ 10 ವರ್ಷಗಳ ಕಾಲ ಖಾಲಿ ಹುದ್ದೆಗಳಿದ್ದರೂ ಸರ್ಕಾರ ಭರ್ತಿ ಮಾಡಿಕೊಳ್ಳದೇ ಗುತ್ತಿಗೆ ಆಧಾರದಲ್ಲಿ ಸಿಬ್ಬಂದಿ ನೇಮಕ ಮಾಡಿ ಕೊಳ್ಳಲು ಮುಂದಾಗುತ್ತಿದೆ. ಹೈದರಾಬಾದ್ ಕರ್ನಾಟಕದಲ್ಲೇ 31 ಸಾವಿರ ಹುದ್ದೆಗಳು ಖಾಲಿ ಇವೆ. ಎಲ್ಲ ಖಾಲಿ ಹುದ್ದೆಗಳನ್ನು ಭರ್ತಿಕೊಳ್ಳುವ ರಾಜಕೀಯ ನಿರ್ಣಯವನ್ನು ರಾಜ್ಯ ಸರ್ಕಾರ ತೆಗೆದುಕೊಳ್ಳಬೇಕು. ಹಣಕಾಸು ಇಲಾಖೆಯಿಂದ ಇದಕ್ಕೆ ಮಂಜೂರಾತಿ ಪಡೆದುಕೊಳ್ಳಬೇಕು’ ಎಂದು ಹೇಳಿದರು.
ಶಾಸಕ ಕೆ.ಎಸ್. ಪುಟ್ಟಣ್ಣಯ್ಯ ಸ್ಥಳಕ್ಕೆ ಬಂದು ಬೆಂಬಲ ಸೂಚಿಸಿದರು. ಶನಿವಾರವೂ ಪ್ರತಿಭಟನೆ ಮುಂದು ವರಿಸಲು ಸಂಘಟಕರು ನಿರ್ಧರಿಸಿದ್ದಾರೆ. ಈ ಮಧ್ಯೆ ಶರಣಪ್ಪ ಅವರು ಪ್ರಜಾವಾಣಿ ಜತೆ ಮಾತನಾಡಿ ಟೆಂಟ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಸುಮಾರು 300 ಜನರನ್ನು ಆರು ಬಸ್ಸುಗಳಲ್ಲಿ ಧಾರವಾಡದ ಸಮೀಪ ಕರೆತಂದಿದ್ದಾರೆ ಎಂದು ತಿಳಿಸಿ ‘ಎಲ್ಲಿಗೆ ಕರೆದೊಯ್ಯು ತ್ತಿದ್ದಾರೆ, ಏಕೆ ಕರೆದೊಯ್ಯುತ್ತಿದ್ದಾರೆ ಎಂದು ಕೂಡ ತಿಳಿಸಿಲ್ಲ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.