ಬೆಂಗಳೂರು : ‘ಜಿಲ್ಲಾ ಪಂಚಾಯ್ತಿ ಮತ್ತು ತಾಲ್ಲೂಕು ಪಂಚಾಯ್ತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರಿಗೆ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆ 1993 ಕುರಿತ ವಿಚಾರ ಸಂಕಿರಣವನ್ನು ಜುಲೈ 23 ರಂದು ನಗರದ ಗಾಂಧಿ ಭವನದಲ್ಲಿ ಆಯೋಜಿಸಲಾಗಿದೆ’ ಎಂದು ಕರ್ನಾಟಕ ಪಂಚಾಯತ್ ಪರಿಷತ್ ಕಾರ್ಯಾಧ್ಯಕ್ಷ ಸಿ.ನಾರಾಯಣಸ್ವಾಮಿ ತಿಳಿಸಿದರು.
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,‘ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಎಚ್.ಕೆ ಪಾಟೀಲ್ ಅವರು ಕಾರ್ಯಕ್ರಮ ಉದ್ಘಾಟಿಸುತ್ತಾರೆ. ಆರೋಗ್ಯ ಸಚಿವ ಕೆ.ಆರ್.ರಮೇಶ್ ಕುಮಾರ್ ಅಧ್ಯಕ್ಷತೆ ವಹಿಸುವರು. ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಅತಿಥಿಗಳಾಗಿ ಭಾಗವಹಿಸುತ್ತಿದ್ದಾರೆ’ ಎಂದು ತಿಳಿಸಿದರು.
‘ವಿಚಾರ ಸಂಕಿರಣದಲ್ಲಿ ಪಂಚಾಯತ್ ರಾಜ್ ಹುಟ್ಟು ಮತ್ತು ಬೆಳವಣಿಗೆ, ಜಿಲ್ಲಾ ಪಂಚಾಯ್ತಿ ಮತ್ತು ತಾಲ್ಲೂಕು ಪಂಚಾಯ್ತಿ ಅಭಿವೃದ್ಧಿ ಜವಾಬ್ದಾರಿ ಮತ್ತು ಸವಾಲುಗಳು ಹಾಗೂ ಪಂಚಾಯತ್ ರಾಜ್ ಯೋಜನೆ ಮತ್ತು ಹಣಕಾಸು ಕುರಿತ ಗೋಷ್ಠಿಗಳು ನಡೆಯುತ್ತವೆ’ ಎಂದು ತಿಳಿಸಿದರು.