ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ 2,485 ದಿನಗೂಲಿ ನೌಕರರನ್ನು ಕರ್ನಾಟಕ ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಕಾಯ್ದೆಯ ವ್ಯಾಪ್ತಿಗೆ ತಂದು, ಸೇವಾ ಭದ್ರತೆ ಒದಗಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಎಚ್.ಕೆ.ಪಾಟೀಲ ತಿಳಿಸಿದರು.
ಗುರುವಾರ ವಿಧಾನಸಭೆಯಲ್ಲಿ ಪತ್ರಕರ್ತರ ಜೊತೆ ಮಾತನಾಡಿದ ಅವರು, ‘ದಿನಗೂಲಿ ನೌಕರರಿಗೆ ಸಾಮಾಜಿಕ ಭದ್ರತೆ ಒದಗಿಸಲು ಈ ಕಾಯ್ದೆ ಜಾರಿಗೆ ತರಲಾಗಿದೆ. ಈ 2006ರ ಏಪ್ರಿಲ್ 10ಕ್ಕೆ ಹತ್ತು ವರ್ಷ ಸೇವೆ ಪೂರೈಸಿದ ದಿನಗೂಲಿ ನೌಕರರನ್ನು ಈ ಕಾಯ್ದೆಯ ವ್ಯಾಪ್ತಿಗೆ ತಂದು ಅಧಿಸೂಚನೆ ಹೊರಡಿಸಲಾಗಿದೆ’ ಎಂದರು.
ನೌಕರರು ಸಲ್ಲಿಸಿದ್ದ ಅರ್ಜಿಗಳನ್ನು ಪರಿಶೀಲಿಸಿದ ಬಳಿಕ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ. ಯಾವುದೇ ನೌಕರರ ಹೆಸರು ಕೈಬಿಟ್ಟು ಹೋಗಿದ್ದರೆ ಮತ್ತೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಈ ಕಾಯ್ದೆಯ ವ್ಯಾಪ್ತಿಗೆ ಬರುವ ಎಲ್ಲ ನೌಕರರಿಗೆ ಅವರ ಹುದ್ದೆಗೆ ಸರಿಸಮನಾದ ವೇತನ ಶ್ರೇಣಿ, ತುಟ್ಟಿಭತ್ಯೆ, ಮನೆ ಬಾಡಿಗೆ ಭತ್ಯೆ ಮತ್ತು ರಜಾ ಸೌಲಭ್ಯಗಳು ದೊರೆಯುತ್ತವೆ ಎಂದು ತಿಳಿಸಿದರು.
ಗ್ರಾಮ ಪಂಚಾಯಿತಿಗಳ ಪುನರ್ವಿಂಗಡಣೆ ಕುರಿತು ಮಾಜಿ ಶಾಸಕ ನಂಜಯ್ಯನಮಠ ನೇತೃತ್ವದ ಸಮಿತಿ ವರದಿ ಸಲ್ಲಿಸಿದೆ. ರದಿಯನ್ನು ಶೀಘ್ರದಲ್ಲೇ ಸಚಿವ ಸಂಪುಟ ಸಭೆಯ ಮುಂದಿಡಲಾಗುವುದು. ಸಂಪುಟದ ಒಪ್ಪಿಗೆ ದೊರೆತ ಬಳಿಕ ಗ್ರಾಮ ಪಂಚಾಯಿತಿಗಳ ಪುನರ್ವಿಂಗ-ಡಣೆ ಸಂಬಂಧ ಆಕ್ಷೇಪಣೆ ಆಹ್ವಾನಿಸಲಾಗುವುದು. ಅಂತಿಮವಾಗಿ ವಿಂಗಡಣೆ ಕುರಿತು ಆದೇಶ ಹೊರಡಿಸಲಾಗುವುದು ಎಂದರು.
ಗ್ರಾಮ ಪಂಚಾಯಿತಿಗಳ ಅಧ್ಯಕ್ಷ ಸ್ಥಾನಕ್ಕೆ ನೇರ ಚುನಾವಣೆ ನಡೆಸಬೇಕು ಎಂದು ಈ ಸಮಿತಿ ಶಿಫಾರಸು ಮಾಡಿದೆ. ಆದರೆ, ಪಂಚಾಯತ್ ರಾಜ್ ವ್ಯವಸ್ಥೆ ಸುಧಾರಣೆ ಕುರಿತು ಶಾಸಕ ಕೆ.ಆರ್. ರಮೇಶ್ಕುಮಾರ್ ನೇತೃತ್ವದ ಸಮಿತಿ ಅಧ್ಯಯನ ನಡೆಸುತ್ತಿದೆ. ಈ ಸಮಿತಿಯ ವರದಿ ಬಂದ ಬಳಿಕ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.