ರಾಮನಗರ: ಜಿಲ್ಲಾಡಳಿತದ ವತಿಯಿಂದ ಇದೇ 27ರಂದು ನಗರದ ಡಾ. ಬಿ,ಆರ್. ಅಂಬೇಡ್ಕರ್ ಭವನದಲ್ಲಿ ವಿಜೃಂಭಣೆಯಿಂದ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಫ್.ಆರ್.ಜಮಾದಾರ್ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಕಂದಾಯ ಭವನದ ಸಭಾಂಗಣದಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಅಂದು ಬೆಳಿಗ್ಗೆ 11 ಗಂಟೆಗೆ ವಿವಿಧ ಕಲಾ ತಂಡಗಳ ಮೆರವಣಿಗೆಯನ್ನು ನಗರದ ವಾಟರ್ ಟ್ಯಾಂಕ್ ವೃತ್ತದಿಂದ ಎಂ.ಜಿ. ರಸ್ತೆ ಮೂಲಕ ಡಾ. ಬಿ.ಆರ್.ಅಂಬೇಡ್ಕರ್ ಭವನದವರೆಗೆ ಕೈಗೊಳ್ಳಲಾಗುವುದು. ಜತೆಗೆ ವಾಲ್ಮೀಕಿ ಅವರ ಭಾವಚಿತ್ರವನ್ನು ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ತರಲಾಗುವುದು ಎಂದು ಅವರು ಹೇಳಿದರು. ಸಮಾರಂಭದಲ್ಲಿ ಐವರ ಗಣ್ಯ ವ್ಯಕ್ತಿಗಳಿಗೆ ಸನ್ಮಾನಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ವಾಲ್ಮೀಕಿ ಜಯತಿಯಂದು ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಹಬ್ಬ ಆಚರಿಸಲು ಸರ್ಕಾರ ಸೂಚಿಸಿದೆ. ಅಂದು ಸರ್ಕಾರ ರಜೆ ಘೋಷಿಸಲಾಗಿದೆ. ಆದರೆ ಎಲ್ಲ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರ ತಪ್ಪದೆ ಸಮಾರಂಭದಲ್ಲಿ ಭಾಗವಹಿಬೇಕು ಎಂದು ಜಿಲ್ಲಾಧಿಕಾರಿ ಆದೇಶಿಸಿದ್ದರು. ಜಿ.ಪಂ ಸಿಇಒ ಕೆ.ಎಸ್.ಮಂಜುನಾಥ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಪ್ರಶಾಂತ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ನಾಗರಾಜ್, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮುಖಂಡರಾದ ಶ್ರೀನಿವಾಸಯ್ಯ (ವಾಸು ಅಂಜನಾಪುರ), ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ.ಶ್ರೀನಿವಾಸ್, ಜಿಲ್ಲಾ ಪ್ರಭಾರ ಅಧ್ಯಕ್ಷರು ಆರ್. ವೆಂಕಟೇಶ್, ಸಮಾಜದ ಮುಖಂಡರಾದ ಅಂಜನಾಪುರ ತಿಮ್ಮಯ್ಯ, ರಮೇಶ್, ರಾಘವೇಂದ್ರ ನಾಯಕ್, ಸುರೇಶ್ ಇದ್ದರು.