ಬೆಂಗಳೂರು: ಎಂಡೊಸಲ್ಫಾನ್ ಪೀಡಿತರ ಸ್ಥಿತಿಗತಿಗೆ ಸಂಬಂಧಿಸಿದಂತೆ ಒಂದು ತಿಂಗಳಲ್ಲಿ ವರದಿ ನೀಡಲು ಸಂಬಂಧಪಟ್ಟ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚಿಸಲಾಗಿದೆ. ವರದಿ ಬಂದ ನಂತರ ಅವರಿಗೆ ನೆರವಾಗುವಂತಹ ಸೂಕ್ತ ಯೋಜನೆ ರೂಪಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಗುರುವಾರ ತಿಳಿಸಿದರು.
ಒಮ್ಮೆ ಪರಿಹಾರ ನೀಡಿ ಸುಮ್ಮನಾದರೆ ಪ್ರಯೋಜನ ಆಗುವುದಿಲ್ಲ. ಸೂಕ್ತ ಚಿಕಿತ್ಸೆ ಕೊಡಿಸುವುದರ ಜೊತೆಗೆ ಜೀವನ ನಿರ್ವಹಣೆಗೆ ಪ್ರತಿ ವರ್ಷ ನೆರವು ನೀಡುವಂತಾಗಬೇಕು. ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸೂಕ್ತ ನೀತಿ ರೂಪಿಸಲಾಗುವುದು ಎಂದರು.
ಬಡತನ ರೇಖೆಗಿಂತ ಮೇಲಿನ (ಎಪಿಎಲ್) ಕುಟುಂಬಗಳಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಹೊಸ ಆರೋಗ್ಯವಿಮಾ ಯೋಜನೆ ರೂಪಿಸಲಾಗುವುದು ಎಂದು ಸಚಿವ ಖಾದರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳಿಗೆ ಈಗಿರುವ ವಿಮಾ ಯೋಜನೆ ಕೆಲವು ಕಾಯಿಲೆಗಳಿಗೆ ಮಾತ್ರ ಸೀಮಿತವಾಗಿದೆ. ಹೆಚ್ಚು ಜನರಿಗೆ ಇದರ ಸದುಪಯೋಗ ಆಗಬೇಕು ಎಂಬಕಾರಣಕ್ಕಾಗಿ ಎಲ್ಲ ಕಾಯಿಲೆಗಳಿಗೂ ವಿಸ್ತರಿಸಲಾಗುವುದು ಎಂದರು.