ಯಾದಗಿರಿ: ಗುಲ್ಬರ್ಗ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಮುಗಿಯುತ್ತಿದ್ದಂತೆಯೇ ಯಾದಗಿರಿ ಜಿಲ್ಲೆಯಲ್ಲೂ ಸಾಹಿತ್ಯ ಸಮ್ಮೇಳನದ ಸಿದ್ಧತೆಗಳು ಆರಂಭಗೊಂಡಂತಾಗಿದೆ. ಮಾತೃ ಜಿಲ್ಲೆಯ ಸಾಹಿತ್ಯ ಸಮ್ಮೇಳನದ ನಂತರ ಇದೀಗ ಜಿಲ್ಲೆಯಲ್ಲೂ ಎರಡನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಮುಂದಾಗಿದೆ.
ಎಲ್ಲವೂ ಅಂದುಕೊಂಡಂತೆ ನಡೆದರೆ, ಬರುವ ಜನವರಿಯಲ್ಲಿ ಎರಡನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಅದ್ದೂರಿಯಾಗಿ ನಡೆಯಲಿದೆ. ಕನ್ನಡ ಸಾಹಿತ್ಯ ಪರಿಷತ್ನ ಜಿಲ್ಲಾ ಘಟಕದ 2012ರಲ್ಲಿ ಅಸ್ತಿತ್ವಕ್ಕೆ ಬಂದಿದ್ದು, 2013ರಲ್ಲಿ ಪ್ರಥಮ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸಲಾಗಿದೆ. ಇದೀಗ ಎರಡನೇ ಸಾಹಿತ್ಯ ಸಮ್ಮೇಳನ ನಡೆಸಬೇಕು ಎನ್ನುವ ಒತ್ತಾಯಗಳು ಕೇಳಿ ಬರುವ ಮುನ್ನವೇ, ಸಾಹಿತ್ಯ ಪರಿಷತ್ತು, ಸಮ್ಮೇಳನಕ್ಕೆ ಸಿದ್ಧವಾಗುತ್ತಿದೆ.
2013ರ ನವೆಂಬರ್ನಲ್ಲಿ ಜಿಲ್ಲಾ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಗರದಲ್ಲಿ ನಡೆಸಲಾಗಿತ್ತು. ಸುರಪುರದ ಹಿರಿಯ ಸಾಹಿತಿ ಎ.ಕೃಷ್ಣ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಅದಾದ ನಂತರ ಮತ್ತೊಂದು ಸಮ್ಮೇಳನವನ್ನು ಆಯೋಜಿಸಬೇಕು ಎನ್ನುವ ಮಾತುಗಳು ಸಾಹಿತ್ಯ ವಲಯದಲ್ಲಿ ಕೇಳಿ ಬರುತ್ತಿದ್ದವು. ಇದರಿಂದಾಗಿ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಪದಾಧಿಕಾರಿಗಳು, 2ನೇ ಸಮ್ಮೇಳನ ಆಯೋಜಿಸುವ ಚಿಂತನೆ ನಡೆಸಿದ್ದು, ಬರುವ ಜನವರಿಯಲ್ಲಿ ಸಮ್ಮೇಳನ ನಡೆಯಲಿದೆ ಎಂದು ಹೇಳಲಾಗುತ್ತಿದೆ.
2013ರಲ್ಲಿಯೂ ಗುಲ್ಬರ್ಗ ಜಿಲ್ಲಾ ಸಾಹಿತ್ಯ ಸಮ್ಮೇಳನದ ನಡೆದ ನಂತರವೇ, ಯಾದಗಿರಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸಲಾಗಿತ್ತು. ಇದೀಗ ಗುಲ್ಬರ್ಗ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಮುಗಿದಿದ್ದು, ಯಾದಗಿರಿ ಜಿಲ್ಲೆಯಲ್ಲೂ ಮತ್ತೊಂದು ನುಡಿ ಜಾತ್ರೆ ಆಯೋಜಿಸಬೇಕು ಎಂದು ಸಾಹಿತ್ಯಾಸಕ್ತರು ಹೇಳುತ್ತಿದ್ದಾರೆ. ಜಿಲ್ಲೆಯಲ್ಲಿ ಅನೇಕ ಸಾಹಿತಿಗಳಿದ್ದು, ಕಲೆ, ಸಾಹಿತ್ಯ, ಸಂಸ್ಕೃತಿಯ ಬಗ್ಗೆ ಗಮನ ಸೆಳೆಯಲು ನಿರಂತರ ಕಾರ್ಯಕ್ರಮಗಳು ನಡೆಯಬೇಕು. ಅದರಲ್ಲೂ ಗಡಿ ಭಾಗದಲ್ಲಿರುವ ಜಿಲ್ಲೆಯಲ್ಲಿ ಕನ್ನಡದ ಚಟುವಟಿಕೆಗಳು ನಡೆಯಬೇಕು. ಈ ಕಾರಣ ಮತ್ತೊಂದು ಸಾಹಿತ್ಯ ಸಮ್ಮೇಳನದ ನಡೆಸಬೇಕು ಎಂದು ಹಿರಿಯ ಸಾಹಿತಿಗಳು ಹೇಳುತ್ತಿದ್ದಾರೆ.
ಜನವರಿಯಲ್ಲಿ ಸಮ್ಮೇಳನ: ಕನ್ನಡ ಸಾಹಿತ್ಯ ಪರಿಷತ್ತಿನ ಶತಮಾನೋತ್ಸವ ಸಮಾರಂಭಗಳು ನಡೆಯುತ್ತಿದ್ದು, ಇದೇ ಸಂದರ್ಭದಲ್ಲಿ ಯಾದಗಿರಿ ಜಿಲ್ಲಾ ಎರಡನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸಲು ಚಿಂತನೆ ಮಾಡಲಾಗುತ್ತಿದೆ. ಈ ಕಾರಣದಿಂದ ಎರಡನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಜನವರಿ ಅಥವಾ ಫೆಬ್ರುವರಿಯಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಹೇಳಲಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ಧಪ್ಪ ಹೊಟ್ಟಿ, ಎರಡನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಜನವರಿಯಲ್ಲಿ ಆಯೋಜಿಸಲಾಗುವುದು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಸಾಹಿತ್ಯ ಚಟುವಟಿಕೆಗಳನ್ನು ನಿರಂತರವಾಗಿ ನಡೆಸಿಕೊಂಡು ಹೋಗುವ ನಿಟ್ಟಿನಲ್ಲಿ ಸಾಹಿತ್ಯ ಪರಿಷತ್ತು ಕ್ರಿಯಾಶೀಲವಾಗಿ ಕೆಲಸ ಮಾಡುತ್ತಿದೆ. ಈಗಾಗಲೇ ಪರಿಷತ್ ಭವನದ ನಿರ್ಮಾಣ ಕಾರ್ಯ ಆರಂಭವಾಗಿದೆ. ಜಿಲ್ಲಾ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಯಾಗಿ ನಡೆಸಲಾಗಿದೆ. ಕಳೆದ ಜನವರಿಯಲ್ಲಿ ದ್ವಿತೀಯ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನೂ ಆಯೋಜಿಸಲಾಗಿತ್ತು. ಇದೀಗ ಎರಡನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸಬೇಕು ಎನ್ನುವ ಚರ್ಚೆಗಳು ಆರಂಭವಾಗಿದೆ. ಸಾಹಿತ್ಯ ಪರಿಷತ್ತಿನ ಶತಮಾನೋತ್ಸವ ಸಮಾರಂಭದಲ್ಲಿಯೇ ಎರಡನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.