ಲಖನೌ, ಉತ್ತರ ಪ್ರದೇಶ (ಪಿಟಿಐ): ಬದಾಯೂಂ ಜಿಲ್ಲೆಯಲ್ಲಿ ಇಬ್ಬರು ಸೋದರ ದಲಿತ ಬಾಲಕಿಯರ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಬಗ್ಗೆ ವ್ಯಾಪಕ ಟೀಕೆಗಳು ವ್ಯಕ್ತವಾದ ಬೆನ್ನಲ್ಲೇ ಘಟನೆ ಸಂಬಂಧ ಸಿಬಿಐ ತನಿಖೆ ನಡೆಸುವಂತೆ ಶಿಫಾರಸು ಮಾಡಲು ಉತ್ತರ ಪ್ರದೇಶ ಸರ್ಕಾರ ಶನಿವಾರ ನಿರ್ಧರಿಸಿದೆ.
ಪ್ರಕರಣ ಸಂಬಂಧ ಇಬ್ಬರು ಪೊಲೀಸ್ ಕಾನ್ಸ್ಟೆಬಲ್ಗಳು ಸೇರಿದಂತೆ ಐವರು ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ.
ಪರಿಹಾರ ತೆಗೆದುಕೊಳ್ಳಲು ನಿರಾಕರಿಸಿರುವ ಬಾಲಕಿಯರ ಕುಟುಂಬಗಳು, ತಪ್ಪಿತಸ್ಥರನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸುವಂತೆ ಒತ್ತಾಯಿಸಿವೆ.
‘ಬದಾಯೂಂ ಪ್ರಕರಣದ ಸಂತ್ರಸ್ತ ಕುಟುಂಬಗಳ ಒತ್ತಾಯದಂತೆ ಪ್ರಕರಣವನ್ನು ಸಿಬಿಐ ತನಿಖೆಗೆ ಶಿಫಾರಸು ಮಾಡಲು ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ನಿರ್ಧರಿಸಿದ್ದಾರೆ’ ಎಂದು ಸರ್ಕಾರಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.