ಬೆಳಗಾವಿ: ಇಲ್ಲಿನ ಡಾ. ಬೆಟಗೇರಿ ಕೃಷ್ಣ ಶರ್ಮ ಸ್ಮಾರಕ ಟ್ರಸ್ಟ್ ನೀಡುವ ‘ಡಾ. ಬೆಟಗೇರಿ ಕೃಷ್ಣ ಶರ್ಮ ಕಾದಂಬರಿ ಪ್ರಶಸ್ತಿ’ಗೆ ಪ್ರಸಿದ್ಧ ಕಾದಂಬರಿಕಾರ ಡಾ. ಎಸ್. ಎಲ್. ಭೈರಪ್ಪ ಆಯ್ಕೆಯಾಗಿದ್ದಾರೆ.
ಪ್ರಶಸ್ತಿಯು ₨ 1 ಲಕ್ಷ ಮೊತ್ತವನ್ನು ಒಳಗೊಂಡಿದೆ. ಬೆಳಗಾವಿಯ ಕುಮಾರ ಗಂಧರ್ವ ರಂಗಮಂದಿರದಲ್ಲಿ ಇದೇ 30ರಂದು ನಡೆಯುವ ಸಮಾರಂಭದಲ್ಲಿ ಹಿರಿಯ ಕವಿ ಚನ್ನವೀರ ಕಣವಿ ಪ್ರಶಸ್ತಿ ಪ್ರದಾನ ಮಾಡುವರು. ಡಾ. ಜಿ.ಬಿ. ಹರೀಶ ಅಭಿನಂದನಾ ಭಾಷಣ ಮಾಡುವರು ಎಂದು ಟ್ರಸ್ಟ್ನ ಅಧ್ಯಕ್ಷ ರಾಘವೇಂದ್ರ ಪಾಟೀಲ ಅವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಕಾದಂಬರಿ ವಿಭಾಗದಲ್ಲಿ ಪ್ರಶಸ್ತಿ ನೀಡಲು ಡಾ. ಬಸವರಾಜ ಕಲ್ಗುಡಿ, ಡಾ. ಎಚ್.ಎಸ್. ರಾಘವೇಂದ್ರ ಹಾಗೂ ಪ್ರೊ. ಓ.ಎಲ್. ನಾಗಭೂಷಣಸ್ವಾಮಿ ಅವರನ್ನು ಒಳಗೊಂಡ ಆಯ್ಕೆ ಸಮಿತಿ ರಚಿಸಲಾಗಿತ್ತು. ಈ ಸಮಿತಿಯು ಅವಿರೋಧವಾಗಿ ಭೈರಪ್ಪ ಅವರನ್ನು ಆಯ್ಕೆ ಮಾಡಿದೆ’ ಎಂದು ಪಾಟೀಲ ಹೇಳಿದರು.