ಇಳಕಲ್: '10 ವರ್ಷದ ಆಳ್ವಿಕೆಯಲ್ಲಿ ದೇಶದ ಅಭಿವೃದ್ಧಿ ಹಾಗೂ ಪರಂಪರೆ ರಕ್ಷಣೆಯಲ್ಲಿ ಗಣನೀಯ ಸಾಧನೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮತ್ತೊಮ್ಮೆ ದೇಶದ ನಾಯಕತ್ವ ನೀಡಲು ದೇಶದ ತೀರ್ಮಾನಿಸಿದ್ದಾರೆ' ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಅವರು ಸೋಮವಾರ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಅವಧಿಯಲ್ಲಿ ಕಾನೂನು ಸುವ್ಯವಸ್ಥೆ ಹದೆಗೆಟ್ಟಿದೆ. ಬರಗಾಲದ ಸಂದರ್ಭದಲ್ಲಿ ರೈತರಿಗೆ ನೆರವಾಗದ ನಿಷ್ಕ್ರಿಯಗೊಂಡಿದೆ. ರಾಜ್ಯದ ಜನರು ಕಾಂಗ್ರೆಸ್ ಸರ್ಕಾರಕ್ಕೆ ಶಾಪ ಹಾಕುತ್ತಿದ್ದಾರೆ. ಜನರು ಮೋದಿಜಿ ನೇತೃತ್ವದ ಬಿಜೆಪಿ ಸರ್ಕಾರವೇ ಶ್ರೇಷ್ಠ ಎಂಬ ತೀರ್ಮಾನಕ್ಕೆ ಬಂದಿದ್ದಾರೆ. ಬಿಜೆಪಿ ಮೈತ್ರಿಕೂಟ 28 ಸ್ಥಾನಗಳಲ್ಲೂ ಜಯಗಳಿಸಲಿದೆ' ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
'ಮಲ್ಲಿಕಾರ್ಜುನ ಖರ್ಗೆ ಅವರು ಮೋದಿ ಅವರನ್ನು ಸುಳ್ಳುಗಾರ ಎಂದು ಟೀಕಿಸಿದ್ದಾರೆ. ಸತತ ಸೋಲಿನಿಂದ ಕಂಗೆಟ್ಟಿರುವ ಕಾಂಗ್ರೆಸ್ ಗೆ ಮೋದಿ ಅವರನ್ನು ಟೀಕಿಸುವುದೇ ಕೆಲಸವಾಗಿದೆ. ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದಲ್ಲಿ ಹಗರಣಗಳ ಸರಮಾಲೆಯೇ ಇತ್ತು. ಸ್ವತಃ ರಾಹುಲ್ ಗಾಂಧಿ ಸ್ವಕೇತ್ರದಲ್ಲಿ ಗೆಲ್ಲಲಾಗದೇ ಪಲಾಯನ ಮಾಡಿದ್ದಾರೆ. ಹೀಗಿದ್ದರೂ ಮೋದಿ ಭಯಗೊಂಡಿದ್ದಾರೆ ಎಂದು ತಮ್ಮ ಸಮಾಧಾನಕ್ಕೆ ತಾವು ಹೇಳಿಕೊಳ್ಳುತ್ತಾರೆ ಎಂದು ಕುಟುಕಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ದೊಡ್ಡನಗೌಡ.ಜಿ.ಪಾಟೀಲ, ಶರಣು ತಳ್ಳಿಕೇರಿ, ಮಹಾಂತಗೌಡ ಪಾಟೀಲ, ಅರವಿಂದ ಮಂಗಳೂರ, ಬಿಜೆಪಿಯ ವಿವಿಧ ಮೋರ್ಚಾದ ಪದಾಧಿಕಾರಿಗಳು, ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.