ಚಿಕ್ಕೋಡಿ: ‘ಕಾಂಗ್ರೆಸ್ ಪಕ್ಷದ 5 ಗ್ಯಾರಂಟಿಗಳು ರಾಜ್ಯದ ಪ್ರಗತಿಗೆ ಹೊಸ ದಿಕ್ಸೂಚಿಯಾಗಿದ್ದು, ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ಹೊಸ ಗ್ಯಾರಂಟಿಗಳು ಜಾರಿಯಾಗಲಿವೆ. ದೇಶವೇ ಸಮೃದ್ಧಿಯಾಗಲಿದೆ. ಪ್ರಿಯಾಂಕಾ ಜಾರಕಿಹೊಳಿ ಅವರನ್ನು ಗೆಲ್ಲಿಸಿ ಸಂಸತ್ತಿಗೆ ಕಳುಹಿಸಿ’ ಎಂದು ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ–2 ಪ್ರಕಾಶ ಹುಕ್ಕೇರಿ ಮನವಿ ಮಾಡಿದರು.
ತಾಲ್ಲೂಕಿನ ಇಂಗಳಿ, ಮಾಂಜರಿ, ಅಂಕಲಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಪರವಾಗಿ ಮತ ಯಾಚಿಸಿ ಮಾತನಾಡಿ, ‘ಚಿಕ್ಕೋಡಿ– ಸದಲಗಾ ಕ್ಷೇತ್ರದಲ್ಲಿ ಈ ಭಾಗದ ಶಾಸಕ ಗಣೇಶ ಹುಕ್ಕೇರಿ ಅವರ ಸಹಯೋಗದಲ್ಲಿ ಸವಳು ಜವಳು ಭೂಮಿ ಸಮಸ್ಯೆ ನೀಗಿಸಲು ಸಾಕಷ್ಟು ಅನುದಾನ ತಂದು ರೈತರಿಗೆ ಅನುಕೂಲ ಕಲ್ಪಿಸಿದ್ದೇವೆ. ಪ್ರವಾಹ ಸಮಸ್ಯೆಯಿಂದಾಗಿ ಹಾನಿಯಾದ ಸಾವಿರಾರು ಮನೆಗಳ ಪುನರ್ ನಿರ್ಮಾಣ ಮಾಡಲಾಗಿದೆ. ಅಭಿವೃದ್ಧಿಯ ಪಥದಲ್ಲಿ ಮುಂದುವರೆಯಲು ಈ ಬಾರಿ ಕಾಂಗ್ರೆಸ್ ಬೆಂಬಲಿಸಿ’ ಎಂದರು.
ಶಾಸಕ ಗಣೇಶ ಹುಕ್ಕೇರಿ ಮಾತನಾಡಿ, ‘ಪ್ರಿಯಾಂಕಾ ಜಾರಕಿಹೊಳಿ ಅವರನ್ನು ಗೆಲ್ಲಿಸುವ ಮೂಲಕ ಕೈ ಬಲಪಡಿಸಿ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿಯಲು ತಮ್ಮ ಸಹಕಾರ ಅತ್ಯವಶ್ಯಕ’ ಎಂದರು.
ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಮಾತನಾಡಿ, ‘ನುಡುದಂತೆ ನಡೆದ ಸರ್ಕಾರ ಅಂದ್ರೆ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವಾಗಿದೆ. ಪಂಚ ಗ್ಯಾರಂಟಿ ಜಾರಿ ಮಾಡುವುದಾಗಿ ಸಾರ್ವತ್ರಿಕ ವಿಧಾನಸಭೆ ಚುನಾವಣೆಯಲ್ಲಿ ಹೇಳಿ, ಅಧಿಕಾರಕ್ಕೆ ಬಂದಾಗ ಜಾರಿ ಮಾಡಲಾಯಿತು. ಇದೀಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದ್ದು, ಕೇಂದ್ರದಲ್ಲಿ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಅನುಷ್ಠಾನಕ್ಕೆ ತರಲಾಗುವುದು’ ಎಂದು ಹೇಳಿದರು.
ಮುಖಂಡರಾದ ಡಾ.ಎನ್.ಎ. ಮಗದುಮ್, ಗಣಪತಿ ಧನವಾಡೆ, ಶಿವಾಜಿ ಪವಾರ, ರಮೇಶ ಮುರಚುಟ್ಟೆ, ಸುರೇಶ ಧಾಕನಾಯಿಕ, ಸುಭಾಷ್ ಉಣ್ಣಾಲೆ, ಮೋಹನ ಪಾಠೋಲೆ, ಗಣಪತಿ ಮಾನೆ, ಹೂವನ್ನಾ ಚೌಗಲೆ, ದಾದಾ ಮಾಳಿ, ಶಶಿಕಾಂತ ಧನವಾಡೆ, ಶಾಂತಿನಾಥ ಪಣದೆ, ಬಾಬು ಮಿರ್ಜೆ, ಚಂದ್ರು ಲಂಗೋಟೆ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.