ಬೆಂಗಳೂರು: ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳೀಯ ಮಟ್ಟದಲ್ಲೇ ಸೂಕ್ತ ಪರಿಹಾರ ಒದಗಿಸಲು ರಾಜ್ಯ ಸರ್ಕಾರ ಮೊದಲ ಬಾರಿಗೆ ಆರಂಭಿಸಿರುವ ‘ಜನತಾ ದರ್ಶನ’ ಕಾರ್ಯಕ್ರಮ ಗದಗ ಹೊರತುಪಡಿಸಿ ಇತರೆ ಎಲ್ಲ ಜಿಲ್ಲೆಗಳಲ್ಲಿ ಏಕಕಾಲಕ್ಕೆ ಸೆ.25 ರ ಸೋಮವಾರ ನಡೆಯಲಿದೆ.
ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ಆಯಾ ಜಿಲ್ಲೆಯ ಚುನಾಯಿತ ಪ್ರತಿನಿಧಿಗಳನ್ನು ಸೇರಿಸಿಕೊಂಡು ಜನತಾ ದರ್ಶನ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒಗಳಿಗೆ ಜವಾಬ್ದಾರಿ ನೀಡಲಾಗಿದೆ.
‘ಸಣ್ಣಪುಟ್ಟ ಕೆಲಸಗಳಿಗೆ ಜನರು ಮುಖ್ಯಮಂತ್ರಿ ಕಚೇರಿವರೆಗೆ ಬರುತ್ತಿದ್ದಾರೆ. ಆಡಳಿತಕ್ಕೆ ಚುರುಕು ಮುಟ್ಟಿಸಲು, ಸಾರ್ವಜನಿಕರ ಅಲೆದಾಟ ತಪ್ಪಿಸಲು, ಸಾಧ್ಯವಾದಷ್ಟು ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳಲು ಜಿಲ್ಲಾಮಟ್ಟದ ಜನತಾ ದರ್ಶನ ನೆರವಾಗಲಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಜನತಾ ದರ್ಶನದಲ್ಲಿ ಬರುವ ಅಹವಾಲುಗಳಿಗೆ ತಂತ್ರಜ್ಞಾನ ಆಧಾರಿತ ವ್ಯವಸ್ಥೆಯ ಮೂಲಕ ಪರಿಹಾರ ಒದಗಿಸಲು ‘ಪ್ರಜಾಧ್ವನಿ ಆ್ಯಪ್’ ಸಿದ್ಧಪಡಿಸಲಾಗಿದೆ. ಇದುವರೆಗೂ ಸಾರ್ವಜನಿಕರಿಂದ ಸ್ವೀಕೃತವಾದ ಅರ್ಜಿ, ಮನವಿಗಳನ್ನು ಸಾರ್ವಜನಿಕ ಕುಂದುಕೊರತೆ ನಿವಾರಣಾ ವ್ಯವಸ್ಥೆ (ಐಪಿಜಿಆರ್ಎಸ್) ಹಾಗೂ ಇ-ಆಫೀಸ್ ತಂತ್ರಾಂಶದಲ್ಲಿ ದಾಖಲಿಸಿಕೊಂಡು ವಿಲೇವಾರಿ ಮಾಡಲಾಗುತ್ತಿತ್ತು. ಇದೇ ಮೊದಲ ಬಾರಿ ಎರಡೂ ತಂತ್ರಾಂಶ ಒಳಗೊಂಡ ಹೈಬ್ರಿಡ್ ಆ್ಯಪ್ ಸಿದ್ಧಪಡಿಸಲಾಗಿದೆ. ಸಮಸ್ಯೆಗಳಿಗೆ ಪ್ರತಿ ಇಲಾಖೆಯ ಮುಖ್ಯಸ್ಥರು ಆ್ಯಪ್ ಮೂಲಕವೇ ಉತ್ತರ ನೀಡಲಿದ್ದಾರೆ.
ಗದಗ ಜಿಲ್ಲೆಯ ಜನತಾ ದರ್ಶನ ಸೆ. 28ರಂದು ನಡೆಯಲಿದೆ. ಇನ್ನುಮುಂದೆ ಸಚಿವರ ನೇತೃತ್ವದಲ್ಲಿ ಜಿಲ್ಲಾಮಟ್ಟದಲ್ಲಿ ಪ್ರತಿ ತಿಂಗಳು, ಜಿಲ್ಲಾಧಿಕಾರಿ ನೇತೃತ್ವದಲ್ಲಿ ತಾಲ್ಲೂಕುಮಟ್ಟದಲ್ಲಿ 15 ದಿನಕ್ಕೆ ಒಮ್ಮೆ ಜನತಾ ದರ್ಶನ ನಡೆಯಲಿದೆ.