ಚಿಕ್ಕಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸೆಂಬರ್ 29 ರಂದು ಜಿಲ್ಲೆಗೆ ಭೇಟಿ ನೀಡಲಿದ್ದು, ಬಾಗೇಪಲ್ಲಿ ಮತ್ತು ಶಿಡ್ಲಘಟ್ಟ ತಾಲ್ಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ವಿತರಿಸಲಿದ್ದಾರೆ.
ನಗರದಲ್ಲಿ ಇತ್ತೀಚೆಗೆ ಮುಖ್ಯಮಂತ್ರಿ ಕಾರ್ಯಕ್ರಮದ ಪೂರ್ವಭಾವಿ ಸಭೆ ನಡೆಸಿದ ಪ್ರಭಾರ ಜಿಲ್ಲಾಧಿಕಾರಿ ಕೆ.ಎನ್.ಅನುರಾಧಾ ಅವರು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಮುಖ್ಯಮಂತ್ರಿ ಕಾರ್ಯಕ್ರಮದ ವಿವಿಧ ಜವಾಬ್ದಾರಿಗಳನ್ನು ವಹಿಸಿ, ಲೋಪವಾಗದಂತೆ ನಿಭಾಯಿಸಲು ಸೂಚಿಸಿದರು.
ಕಳೆದ ನಾಲ್ಕೂವರೆ ವರ್ಷಗಳ ಅವಧಿಯಲ್ಲಿ ಸರ್ಕಾರ ಜಿಲ್ಲೆಯಲ್ಲಿ ಜಾರಿಗೆ ತಂದ ಯೋಜನೆಗಳ ಸಮಗ್ರ ಮಾಹಿತಿ ಕ್ರೂಢೀಕರಿಸಬೇಕು. ಅರ್ಹ ಫಲಾನುಭವಿಗಳ ಪಟ್ಟಿ ಸಿದ್ಧಪಡಿಸಿಕೊಳ್ಳಬೇಕು. ಪ್ರತಿಯೊಂದು ಇಲಾಖೆಯ ಹಿರಿಯ ಅಧಿಕಾರಿಗಳು ತಮ್ಮ ಇಲಾಖೆಯ ಸಾಧನೆ ಮತ್ತು ಪ್ರಗತಿಯ ಮಾಹಿತಿಯನ್ನು ಸಕಾಲಕ್ಕೆ ಒದಗಿಸಬೇಕು ಎಂದು ಹೇಳಿದರು.
ಶಾಸಕ ಎಸ್.ಎನ್.ಸುಬ್ಬಾರೆಡ್ಡಿ, ಜಿಲ್ಲಾ ಪಂಚಾಯಿತಿ ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿ.ಸಿದ್ದರಾಮಯ್ಯ, ಉಪ ವಿಭಾಗಾಧಿಕಾರಿ ಶಿವಸ್ವಾಮಿ, ಎಸ್ಪಿ ಕಾರ್ತಿಕ್ ರೆಡ್ಡಿ ಉಪಸ್ಥಿತರಿದ್ದರು.