ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಕ್ಕಲಿಗರನ್ನು ತುಳಿಯುವ ಕೆಲಸ ಮಾಡುತ್ತಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ದೂರಿದರು.
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಎಚ್.ಡಿ.ರೇವಣ್ಣ ಅವರನ್ನು ಬಂಧಿಸಿರುವುದೇ ಇದಕ್ಕೆ ಸಾಕ್ಷಿ ಎಂದು ಅವರು ಹೇಳಿದರು. ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಅಶೋಕ ಅವರು ರೇವಣ್ಣ ಬಂಧನವನ್ನು ಸಮರ್ಥಿಸಿಕೊಂಡಿದ್ದರು.
ಎಚ್.ಡಿ.ಕುಮಾರಸ್ವಾಮಿ ಅವರ ಬಗೆಗಿನ ದ್ವೇಷದ ಕಾರಣ ದೇವೇಗೌಡರ ಕುಟುಂಬವನ್ನು ತುಳಿಯುಲು ಹೊರಟಿದ್ದಾರೆ. ಕೇವಲ ಒಕ್ಕಲಿಗರು ಮಾತ್ರವಲ್ಲ ಲಿಂಗಾಯತ ಸಮುದಾಯದ ಬಗ್ಗೆಯೂ ಸಿದ್ದರಾಮಯ್ಯ ಅವರಿಗೆ ಅಸಹನೆ ಇದೆ. ಚುನಾವಣೆ ಸಮಯ ನೋಡಿಕೊಂಡು ತುಳಿಯುವ ಕೆಲಸಕ್ಕೆ ಮುಂದಾಗಿದ್ದಾರೆ ಎಂದರು.
ಕಾಂಗ್ರೆಸ್– ಜೆಡಿಎಸ್ ಮೈತ್ರಿ ಇದ್ದಾಗಲೇ ಪ್ರಜ್ವಲ್ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಕಾಂಗ್ರೆಸ್ ಹೇಳಿದೆ. ಹಾಗಿದ್ದರೆ ಅಧಿಕಾರಕ್ಕೆ ಬಂದು ಒಂದು ವರ್ಷ ಸುಮ್ಮನೆ ಇದ್ದಿದ್ದು ಏಕೆ? ಆಗಲೇ ಕ್ರಮ ತೆಗೆದುಕೊಳ್ಳಬಹುದಿತ್ತಲ್ಲ ಎಂದು ಪ್ರಶ್ನಿಸಿದರು.