ಹಾಸನ: ಮಕ್ಕಳಲ್ಲಿನ ನೇತ್ರ ಸಂಬಂಧಿ ಕಾಯಿಲೆಯನ್ನು ಸಮಯೋಚಿತವಾಗಿ ಗುರುತಿಸಿ ಸೂಕ್ತ ಚಿಕಿತ್ಸೆ ಕೊಡಿಸಲು ಶಿಕ್ಷಕ ಮತ್ತು ಪೋಷಕರು ಗಮನ ಹರಿಸಬೇಕು ಎಂದು ನೇತ್ರ ತಜ್ಞ ಡಾ. ವೈ.ಎಸ್. ಜಗದೀಶ್ ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಪಂಚಾಯಿತಿ ಹಾಗೂ ರೋಟರಿ ವತಿಯಿಂದ ಇತ್ತೀಚೆಗೆ ನಡೆದ ಟೀಚ್ (ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ) ಮತ್ತು ನೇತ್ರ ರಕ್ಷಣೆ ಕುರಿತ ತರಬೇತಿ, ಕಾರ್ಯಯೋಜನೆ ರೂಪಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.
ನೇತ್ರ ಸಂಬಂಧಿ ಸಮಸ್ಯೆಗಳನ್ನು ಪ್ರಾಥಮಿಕ ಹಂತದಲ್ಲಿಯೇ ಗುರುತಿಸಬೇಕು. ಇದಕ್ಕಾಗಿ ಶಿಕ್ಷಕರಿಗೆ ತರಬೇತಿ ನೀಡಬೇಕು. ಎಲ್ಲ ಇಲಾಖೆಗಳು ಒಗ್ಗೂಡಿ ಮಕ್ಕಳ ನೇತ್ರ ಸಮಸ್ಯೆಯ ವಿರುದ್ಧ ಹೋರಾಡಬೇಕು ಎಂದರು.
ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಎಚ್.ಸಿ. ಪುಟ್ಟಸ್ವಾಮಿ ಮಾತನಾಡಿ, ರೋಟರಿ ಅನೇಕ ಕ್ಷೇತ್ರಗಳಿಗೆ ಕೊಡುಗೆ ನೀಡುತ್ತ, ಉತ್ಕೃಷ್ಟ ಸಮಾಜ ನಿರ್ಮಿಸುವತ್ತ ದಾಪುಗಾಲಿಡುತ್ತಿದೆ. ಸಂಸ್ಥೆಯಿಂದ ಜಾರಿಯಲ್ಲಿರುವ ಪ್ರಯೋಜನಕಾರಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ನೋಡಿಕೊಳ್ಳುವಲ್ಲಿ ಅಧಿಕಾರಿಗಳ ಪಾತ್ರ ಹಿರಿದಾಗಿದೆ ಎಂದರು.
ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಆರ್. ವೆಂಕಟೇಶ್ಕುಮಾರ್ ಮಾತನಾಡಿ, ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಅವಶ್ಯವಿರುವ ಟೀಚ್ ಕಾರ್ಯಕ್ರಮದಡಿ, ಹ್ಯಾಪಿ ಸ್ಕೂಲ್ಗಳನ್ನು ಆಯೋಜಿಸುತ್ತಿರುವುದು ಉತ್ತಮ ಬೆಳವಣಿಗೆ ಎಂದರು.
ಜಿಲ್ಲಾ ಸುರಕ್ಷತಾ ಸಮಿತಿ ಅಧ್ಯಕ್ಷ ಎ. ಚಂದ್ರಶೇಖರ್ ಮಾತನಾಡಿ, ಭಾರತವನ್ನು ಸಂಪೂರ್ಣ ಸಾಕ್ಷರ ರಾಷ್ಟ್ರವನ್ನಾಗಿ ಮಾಡಲು ರೋಟರಿ ಪಣ ತೊಟ್ಟಿದ್ದು, ಆ ನಿಟ್ಟಿನಲ್ಲಿ ಸಾಗುತ್ತಿದೆ. ಇದೇ ದಾರಿಯಲ್ಲಿ ಒಂದು ಹೆಜ್ಜೆ ಮುಂದೆ ಹೋಗಿ ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಶಿಕ್ಷಣದ ಗುಣಮಟ್ಟ ಹೆಚ್ಚಿಸುವ ಕೆಲಸ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಅಂಧತ್ವ ನಿಯಂತ್ರಣಾಧಿಕಾರಿ ಡಾ. ಆರ್.ಸಿ. ವೇಣುಗೋಪಾಲ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕಾಂತರಾಜ್, ಡಾ. ಸುಧೀರ್, ರಾಜಶೇಖರ್, ರಮೇಶ್ ಎ.ಐ. ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.