ಸಿಇಟಿ ಮೂಲಕ ವೈದ್ಯಕೀಯ ಸೀಟು ಪಡೆಯುವ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಒಂದು ವರ್ಷದ ಗ್ರಾಮೀಣ ಸೇವೆಯನ್ನು ಕಡ್ಡಾಯಗೊಳಿಸಿರುವುದು ಹಳ್ಳಿಗಳಲ್ಲಿ ವೈದ್ಯರ ಕೊರತೆ ನೀಗಿಸುವ ನಿಟ್ಟಿನಲ್ಲಿ ಉತ್ತಮವಾದ ನಿರ್ಧಾರ.
ಇದು ಲಕ್ಷಾಂತರ ಹಳ್ಳಿಗರಿಗೆ ವರದಾನವಾಗಿದೆ. ಆದರೆ ‘ನೀಟ್’ ಪರೀಕ್ಷೆ ಮೂಲಕ ವೈದ್ಯಕೀಯ ಸೀಟು ಪಡೆಯುವ ವಿದ್ಯಾರ್ಥಿಗಳಿಗೆ ಈ ಷರತ್ತು ಅನ್ವಯಿಸದಿರುವುದು ಬೇಸರದ ಸಂಗತಿ.
ವಿದ್ಯಾರ್ಥಿಗಳು ಗ್ರಾಮೀಣ ಸೇವೆ ಮಾಡುವುದರಿಂದ ತಪ್ಪಿಸಿಕೊಳ್ಳಲು, ಸಿಇಟಿ ಮೂಲಕ ಆಯ್ಕೆ ಮಾಡಿಕೊಂಡಿರುವ ಸೀಟನ್ನು ತ್ಯಜಿಸಿ ‘ನೀಟ್’ ಮೂಲಕ ಸೀಟಿನ ಆಯ್ಕೆ ಮಾಡಿಕೊಂಡಿರುವ ಪ್ರಕರಣಗಳು ಬಹಳಷ್ಟಿವೆ.
ನಮ್ಮ ಶಾಲಾ ಕಾಲೇಜುಗಳಲ್ಲಿ ಮಕ್ಕಳಿಗೆ ದೇಶದ ಗ್ರಾಮೀಣ ಸಮಸ್ಯೆಗಳ ಬಗ್ಗೆ ಪಾಠ ಪ್ರವಚನಗಳ ಮೂಲಕ ಅರಿವು ಮೂಡಿಸಲಾಗುತ್ತಿದೆ. ಆದರೂ ವಿದ್ಯಾರ್ಥಿಗಳು ಸೇವಾ ಮನೋಭಾವ ಬೆಳೆಸಿಕೊಳ್ಳದಿರುವುದು ವಿಷಾದನೀಯ.
‘ನೀಟ್’ ಮೂಲಕ ಸೀಟು ಪಡೆಯುವ ವಿದ್ಯಾರ್ಥಿಗಳಿಗೂ ಗ್ರಾಮೀಣ ಸೇವೆಯನ್ನು ಕಡ್ಡಾಯಗೊಳಿಸಬೇಕು. ಆಗಮಾತ್ರ ಹಳ್ಳಿಗಳಲ್ಲಿ ವೈದ್ಯರ ಕೊರತೆಯನ್ನು ನೀಗಿಸಬಹುದು. ಯುವ ಪೀಳಿಗೆ ಸಹ ಗ್ರಾಮೀಣ ಜನರ ಸ್ಥಿತಿಗತಿ ಸುಧಾರಿಸುವ ನಿಟ್ಟಿನಲ್ಲಿ ಸಾಧ್ಯವಾದಷ್ಟು ಮಟ್ಟಿಗೆ ತಮ್ಮನ್ನು ತೊಡಗಿಸಿಕೊಳ್ಳುವ ಮನಸ್ಥಿತಿ ರೂಢಿಸಿಕೊಳ್ಳಬೇಕು.