ಬೆಂಗಳೂರು: ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್ಪಿಸಿಬಿ) ಅಧ್ಯಕ್ಷ ಲಕ್ಷ್ಮಣ ಅವರ ನೇಮಕ ಪ್ರಶ್ನಿಸಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ಅರಣ್ಯ ಮತ್ತು ಪರಿಸರ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.
ಮಾಹಿತಿ ಹಕ್ಕು ಕಾರ್ಯಕರ್ತ ಟ.ನರಸಿಂಹಮೂರ್ತಿ ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ಹಾಗೂ ನ್ಯಾಯಮೂರ್ತಿ ಆರ್.ಬಿ.ಬೂದಿಹಾಳ್ ಅವರಿದ್ದ ವಿಭಾಗೀಯ ಪೀಠವು ಸೋಮವಾರ ವಿಚಾರಣೆ ನಡೆಸಿತು.
ಅರ್ಜಿದಾರ ನರಸಿಂಹ ಮೂರ್ತಿ ಸ್ವತಃ ವಾದ ಮಂಡಿಸಿ, ‘ಕಾನೂನು ಪ್ರಕಾರ ಕೆಎಸ್ಪಿಸಿಬಿ ಅಧ್ಯಕ್ಷ ಸ್ಥಾನಕ್ಕೆ ಪರಿಸರ ಮತ್ತು ವಿಜ್ಞಾನಕ್ಕೆ ಸಂಬಂಧಿಸಿದ ಸ್ನಾತಕೋತ್ತರ, ಪರಿಸರ ತಂತ್ರಜ್ಞಾನ ವಿಷಯದಲ್ಲಿ ಎಂಜಿನಿಯರಿಂಗ್ ಪದವಿ ಪಡೆದವರನ್ನು ನೇಮಕ ಮಾಡಬೇಕು. ಆದರೆ ಲಕ್ಷ್ಮಣ ಅವರು ಸಿವಿಲ್ ಎಂಜಿನಿಯರಿಂಗ್ ಪದವೀಧರರಾಗಿದ್ದಾರೆ. ಇದು ರಾಜಕೀಯ ಪ್ರೇರಿತ. ಆದ್ದರಿಂದ ಈ ನೇಮಕವನ್ನು ಅಸಿಂಧುಗೊಳಿಸಬೇಕು’ ಎಂದು ಕೋರಿದರು.
ಆಕ್ಷೇಪಣೆ ಸಲ್ಲಿಸಲು ಪೀಠವು ಒಂದು ವಾರ ವಿಚಾರಣೆಯನ್ನು ಮುಂದೂಡಿತು.